ಬೆಂಗಳೂರು(ಆ.28): ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಪರ ನಿಂತಿದ್ದಾರೆ.
ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಮತ್ತೊಂದು ಟ್ವೀಟ್ನಲ್ಲಿ ಎಚ್ಡಿಕೆ ಮರಾಠಿಗರಿಗೆ ಎಚ್ಚರಿಕೆ ನೀಡಿದ್ಧಾರೆ.
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಡಿಕೆ ವಾರ್ನ್ ಮಾಡಿದ್ದಾರೆ.
ಇದನ್ನೂ ಓದಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಕೆ.ಜೆ. ಜಾರ್ಜ್ಗೆ ಮತ್ತೆ ಸಮನ್ಸ್ ಜಾರಿ
ಕನ್ನಡಿಗರೆಂದರೆ ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂದು ರಾಯಣ್ಣನ ಪ್ರತಿಮೆ ಸ್ಥಾಪಿಸಿದ ಕನ್ನಡ ಹೋರಾಟಗಾರರನ್ನ ಹೊಗಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ