ಬೆಂಗಳೂರು: ರಾಜ್ಯ ಸಭಾ ಚುನಾವಣೆ (Rajyasabha Election) ಕಣ ರಂಗೇರಿದೆ. ಕರ್ನಾಟಕದಿಂದ (Karnataka) ನಾಲ್ಕನೇ ಅಭ್ಯರ್ಥಿ ಆಯ್ಕೆ (4th Candidate) ಮಾಡಲು ಪಕ್ಷಗಳು ಸರ್ಕಸ್ ಮಾಡುತ್ತಿವೆ. ಶತಾಯಗತಾಯ ಹೇಗಾದರೂ ಮಾಡಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇ ಬೇಕು ಅಂತ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಶಪಥಮಾಡಿದೆ. ಮತ್ತೊಂದೆಡೆ ಜೆಡಿಎಸ್ಗೆ (JDS) ತನ್ನ ಅಭ್ಯರ್ಥಿಯನ್ನು ಗೆಲ್ಲಿಸಬೇಕಾದಷ್ಟು ಮತಗಳು (Vote) ಇಲ್ಲ. ಹೀಗಾಗಿ ಜೆಡಿಎಸ್ ಬೆಂಬಲಕ್ಕಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಸರ್ಕಸ್ ಮಾಡುತ್ತಿವೆ. ಈ ನಡುವೆ ಜೆಡಿಎಸ್ ಶಾಸಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪತ್ರ (Letter) ಬರೆದಿದ್ದಾರೆ. ಇದೀಗ ಈ ಪತ್ರಕ್ಕೆ ಎಚ್ಡಿ ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಿದ್ರೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ? ಅದಕ್ಕೆ ಎಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದೇಕೆ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ಓದಿ...
ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಜಾತ್ಯಾತೀತತೆಯ ಪರವಾಗಿ ಆತ್ಮಸಾಕ್ಷಿಯ ಮತವನ್ನು ನಮ್ಮ ಅಭ್ಯರ್ಥಿಗೆ ನೀಡಿ ಎಂದು ಜೆಡಿಎಸ್ ಶಾಸಕರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರದಲ್ಲಿ ವಿನಂತಿ ಮಾಡಿದ್ದಾರೆ.
ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ?
ಜಾತ್ಯತೀತ ಜನತಾದಳದ ವಿಧಾನಸಭಾ ಸದಸ್ಯರಿಗೆ ಪ್ರೀತಿಯ ನಮಸ್ಕಾರಗಳು. ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಬದಲಾವಣೆಗಳಿಗೂ ರಾಜಕೀಯ ಬದಲಾವಣೆಯೇ ಚಾಲನಾ ಶಕ್ತಿ ಎನ್ನುವುದು ನಾವು ಇತಿಹಾಸದಿಂದ ಕಲಿತ ಪಾಠವಾಗಿದೆ. ಕಲಿತ ಪಾಠವನ್ನು ಪ್ರಯೋಗಿಸುವ ಅವಕಾಶ ಎದುರಾದಾಗ ಮುಕ್ತ ಮನಸ್ಸಿನಿಂದ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ.
ಇದನ್ನೂ ಓದಿ: Karnataka Politics: ಬಸವರಾಜ ಹೊರಟ್ಟಿ ಅಧಿಕಾರದ ಆಸೆಯಿಂದ ಬಿಜೆಪಿಗೆ ಹೋಗಿದ್ದಾರೆ- ಸಿದ್ದರಾಮಯ್ಯ
ಜೆಡಿಎಸ್ ಅಭ್ಯರ್ಥಿ ನಿಲ್ಲಿಸಿದ್ದು ನನಗೆ ಆಘಾತವಾಗಿದೆ
ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.
ಮನ್ಸೂರ್ ಖಾನ್ ಪರ ಮತ ಚಲಾಯಿಸುವಂತೆ ಮನವಿ
ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ದವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ ಅಂತ ಪತ್ರದಲ್ಲಿ ಸಿದ್ದರಾಮಯ್ಯ ಬರೆದಿದ್ದಾರೆ.
ಸಿದ್ದರಾಮಯ್ಯ ಪತ್ರಕ್ಕೆ ಎಚ್ಡಿಕೆ ಕಿಡಿಕಿಡಿ
ಇನ್ನು ಸಿದ್ದರಾಮಯ್ಯ ಪತ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ, ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿದ್ದ ಸಿದ್ಧರಾಮಯ್ಯನವರಿಗೆ ನಾಚಿಕೆ ಆಗಬೇಕು. ಆತ್ಮಸಾಕ್ಷಿ ಎಂದರೆ ಏನು ಅಂತ ಅವರಿಗೆ ಗೊತ್ತಿದೆಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ವಾಗ್ದಾಳಿ
ಸಿದ್ಧರಾಮಯ್ಯನವರು ಆತ್ಮಸಾಕ್ಷಿಯ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಹಿಂದೆ ಜೆಡಿಎಸ್ ಶಾಸಕರಿಂದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಸಿದ್ದರು. ಆಗ ಅವರ ಆತ್ಮಸಾಕ್ಷಿ ಎಲ್ಲಿ ಹೋಗಿತ್ತು ಎಂದು ಸುದ್ದಿಗೋಷ್ಠಿಯಲ್ಲೇ ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: Ramanagara: ಕುಮಾರಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ! ಸಿಎಂಗೆ ಪತ್ರ ಬರೆದ ಯೋಗೇಶ್ವರ್
ವಿಧಾನಸಭಾ ಚುನಾವಣೆಗೆ ಬಿಬಿಎಂಪಿ
ಇದೇ ತಿಂಗಳ 22 ರಂದು ಬೆಂಗಳೂರಿನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಮಾಡುತ್ತಿದ್ದೇವೆ ಅಂತ ಎಚ್ಡಿಕೆ ಹೇಳಿದ್ದಾರೆ. ಬೆಂಗಳೂರಿನಲ್ಲಿ 1 ತಿಂಗಳು ಜನತಾ ಸೇವಕ ಎಂಬ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಿದ್ದು, ಬಿಬಿಎಂಪಿ ಮತ್ತು ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದೇವೆ. 123 ಸ್ಥಾನ ಗೆಲ್ಲುವುದು ನಮ್ಮ ಗುರಿ ಅಂತ ಅವರು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ