ಬೆಂಗಳೂರು: ವಿಧಾನಸಭಾ ಚುನಾವಣೆ (Assembly Election 2023) ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ (Political Party) ಟಿಕೆಟ್ ಫೈಟ್ ಜೋರಾಗುತ್ತಿದೆ. ಮತ್ತೊಂದು ಕಡೆ ಪಕ್ಷದ ಪ್ರಮುಖರಾಗಿರುವ ನಾಯಕರಿಗೆ ತಾವು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ರೆ ಒಳಿತು ಎಂಬುದರ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ. ಈಗಾಗಲೇ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕರ ಸಿದ್ದರಾಮಯ್ಯ (Former CM Siddaramaiah) ಬಾದಾಮಿ (Badami) ಕ್ಷೇತ್ರ ತೊರೆದು ಕೋಲಾರದತ್ತ (Kolar) ಮುಖ ಮಾಡಿದ್ದಾರೆ. ಕೋಲಾರದ ಜೊತೆಯಲ್ಲಿ ವರುಣಾ (Varuna) ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಅವರು ಸಹ 2018ರ ಚುನಾವಣೆಯಂತೆ ಈ ಬಾರಿಯೂ ಎರಡು ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
2018ರ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿ ಎರಡೂ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದರು. ಫಲಿತಾಂಶದ ಬಳಿಕ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಎರಡು ಕ್ಷೇತ್ರ ಯಾಕೆ?
*ಜೆಡಿಎಸ್ ಬಹುಮತ ಪಡೆದ್ರೆ ಮತ್ತೆ ನಾನೇ ಮುಖ್ಯಮಂತ್ರಿ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಸಿಎಂ ಅಭ್ಯರ್ಥಿಯಾಗಿರುವ ಕಾರಣ ಚುನಾವಣೆಯಲ್ಲಿ ಸೋತ್ರೆ ಮುಖಭಂಗ ಆಗಲಿದೆ. ಹಾಗಾಗಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಕುಮಾರಸ್ವಾಮಿ ಯೋಚಿಸಿದ್ದಾರೆ ಎನ್ನಲಾಗಿದೆ.
*ಇನ್ನು ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗುರುತಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದಲೇ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಯೋಗೇಶ್ವರ ಮನೆ ಮನೆಗೂ ತೆರಳಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
*ಹೆಚ್.ಡಿ.ಕುಮಾರಸ್ವಾಮಿ ಅವರು ಹೊರಗಿನವರು ಎಂದು ಬಿಂಬಿಸಿ ಸಿ.ಪಿ.ಯೋಗೇಶ್ವರ ಮತ ಯಾಚನೆ ಮಾಡುತ್ತಿದ್ದಾರೆ.
*ಇತ್ತ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಡೀ ರಾಜ್ಯದ ಪ್ರವಾಸ ಮಾಡುವ ಅನಿವಾರ್ಯವಿದೆ. ಬೇರೆ ಕ್ಷೇತ್ರಗಳಿಗೆ ತೆರಳಿದ್ರೆ ಸ್ವಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ನಡೆಸಲು ಅಸಾಧ್ಯ. ಇದು ಗೆಲುವಿಗೆ ಹಿನ್ನಡೆ ಆಗುವ ಆತಂಕ ಉಂಟಾಗಿದೆ.
ಎರಡನೇ ಕ್ಷೇತ್ರ ಯಾವುದು?
ಸುರಕ್ಷತೆಗಾಗಿ ಎರಡೂ ಕ್ಷೇತ್ರದಿಂದ ಆಯ್ಕೆ ಮಾಡಿಕೊಂಡ್ರೆ ಒಳ್ಳೆಯದು ಎಂದು ಆಪ್ತರು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆಪ್ತರು ರಾಮನಗರ ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಲಹೆ ನೀಡಿದ್ದಾರಂತೆ. ಆದ್ರೆ ಕುಮಾರಸ್ವಾಮಿ ಇದುವರೆಗೂ ತಮ್ಮ ನಿರ್ಧಾರ ಪ್ರಕಟಿಸಿಲ್ಲ ಎನ್ನಲಾಗಿದೆ. ಮಂಡ್ಯ ಜನರು ಸಹ ತಮ್ಮ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತಾರಾ?
ಇನ್ನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದರ ಮೇಲೆಯೂ ಕುಮಾರಸ್ವಾಮಿ ನಿರ್ಧಾರ ನಿಂತಿದೆ. ಇತ್ತ ಚನ್ನಪಟ್ಟಣದಲ್ಲಿ ಆಂತರಿಕ ಸಮೀಕ್ಷೆ ನಡೆಸಲು ಹೆಚ್ಡಿಕೆ ಸೂಚಿಸಿದ್ದಾರಂತೆ. ಸಮೀಕ್ಷೆ ವರದಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದರ ಮೇಲೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕಾ ಅನ್ನೋದನ್ನು ಕುಮಾರಸ್ವಾಮಿ ನಿರ್ಧರಿಸುವ ಸಾಧ್ಯತೆಗಳಿವೆ. ಹಾಗಾಗಿ ಚುನಾವಣೆ ದಿನಾಂಕ ಘೋಷಣೆ ಆಗೋವರೆಗೂ ಕುಮಾರಸ್ವಾಮಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಲಿದ್ದಾರೆ.
ಮಮತಾ ಬ್ಯಾನರ್ಜಿ ಸೋಲು
2021ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಪಶ್ಚಿಮ ಬಂಗಾಳದ ಹಿರಿಯ ಮುಖಂಡರು ಸಲಹೆ ನೀಡಿದ್ದರು. ಆದ್ರೆ ಮಮತಾ ಬ್ಯಾನರ್ಜಿ ರಾಜಕೀಯ ಜಿದ್ದಾಜಿದ್ದಿನ ಹಿನ್ನೆಲೆ ನಂದಿಗ್ರಾಮದಿಂದ ಸ್ಪರ್ಧೆ ಮಾಡಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಪರಾಭವಗೊಂಡಿದ್ದರು.
ಇದನ್ನೂ ಓದಿ: Paresh Mesta Case: ಪರೇಶ್ ಮೇಸ್ತಾ ಹತ್ಯೆ ಕೇಸ್; 122 ಜನರ ವಿರುದ್ಧ ದಾಖಲಾಗಿದ್ದ ಕೇಸ್ ಹಿಂಪಡೆದ ಸರ್ಕಾರ
ನಂತರ ಭವಾನಿಪುರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಮಮತಾ ಬ್ಯಾನರ್ಜಿ ಗೆದ್ದಿದ್ದರು. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ವಿರುದ್ಧ 58,389 ಮತಗಳ ಅಂತರದಲ್ಲಿ ಮಮತಾ ಬ್ಯಾನರ್ಜಿ ಗೆಲುವು ದಾಖಲಿಸಿದ್ದರು.
ನಿಖಿಲ್ ಕುಮಾರಸ್ವಾಮಿಗೆ ರಾಮನಗರ ಟಿಕೆಟ್?
ಕೆಲ ದಿನಗಳ ಹಿಂದೆ ರಾಮನಗರದ ಶಾಸಕಿ ಅನಿತಾ ಕುಮಾರಸ್ವಾಮಿ ಚುನಾವಣೆ ಪ್ರಚಾರ ನಡೆಸುವ ಸಂದರ್ಭದಲ್ಲಿ ಪುತ್ರ ನಿಖಿಲ್ಗೆ ತಮ್ಮ ಕ್ಷೇತ್ರ ಬಿಟ್ಟುಕೊಡೋದಾಗಿ ಹೇಳಿದ್ದರು. ಅದರಂತೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ