news18-kannada Updated:December 6, 2020, 7:22 PM IST
ಸಿದ್ದರಾಮಯ್ಯ.
ಬೆಂಗಳೂರು (ಡಿಸೆಂಬರ್ 06); ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇಳಿದು ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ. ಆದರೂ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ಮಾತ್ರ ಇನ್ನೂ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಆಗಿಂದಾಗ್ಗೆ ತಮ್ಮ ಸಮ್ಮಿಶ್ರ ಸರ್ಕಾರ ಕುಸಿಯಲು ಸಿದ್ದರಾಮಯ್ಯನವರೇ ಕಾರಣ ಎಂದು ಈವರೆಗೆ ಹಲವು ಬಾರಿ ಟೀಕಿಸಿದ್ದಾರೆ. ಆದರ, ಈ ಟೀಕೆಗೆ ಇಂದು ಟ್ವೀಟ್ ಮೂಲಕ ಉತ್ತರ ನೀಡಿರುವ ಸಿದ್ದರಾಮಯ್ಯ, "ಜೆಡಿಎಸ್ ನವರ ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ. ಅವರು ಬಿಜೆಪಿ ಬಗ್ಗೆ ಸದಾ ಮೃದು ಧೋರಣೆ ಹೊಂದಿದ್ದಾರೆ. ಹೀಗಾಗಿ ಜೆಡಿಎಸ್ ಪಕ್ಷ ಬಿಜೆಪಿಯ 'ಬಿ ಟೀಮ್' ಎಂದು ಹರಿಹಾಯ್ದಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯ ನಂತರದ ಸಮ್ಮಿಶ್ರ ಸರ್ಕಾರ ರಚನೆ ಕುರಿತು ಮಾತನಾಡಿರುವ ಸಿದ್ದರಾಮಯ್ಯ, "ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಸರ್ಕಾರ ರಚನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್, ನಾನಲ್ಲ. 37 ಸ್ಥಾನ ಗೆದ್ದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದ್ದರು, ಇದರಲ್ಲಿ ಟ್ರ್ಯಾಪಿಂಗ್ ಎಲ್ಲಿಂದ ಬಂತು?" ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ, ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಟೀಕಿಸಿರುವ ಸಿದ್ದರಾಮಯ್ಯ, "ಜೆಡಿಎಸ್ ನವರ ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ. ಅವರು ಬಿಜೆಪಿ ಬಗ್ಗೆ ಸದಾ ಮೃದು ಧೋರಣೆ ಹೊಂದಿದ್ದಾರೆ. ನಿನ್ನೆ ಕುಮಾರಸ್ವಾಮಿ ಅವರು ತಾವು ಬಿಜೆಪಿಗೆ ಹೋಗಿದ್ದರೆ 5 ವರ್ಷ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎನ್ನುವುದು" ಎಂದು ಕಿಡಿಕಾರಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, "2004ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ ಜಿಡಿಎಸ್ 59 ಸ್ಥಾನಗಳನ್ನು ಗೆದ್ದಿತ್ತು, ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರದ ಚುನಾವಣೆಯಲ್ಲಿ 28 ಸ್ಥಾನ, 2013 ರ ಚುನಾವಣೆಯಲ್ಲಿ 40 ಸ್ಥಾನ, ಕಳೆದ ಚುನಾವಣೆಯಲ್ಲಿ 37 ಸ್ಥಾನ ಗೆದ್ದಿತ್ತು. ಕುಮಾರಸ್ವಾಮಿ ಜನರ ಬಳಿ ಗೌರವ ಉಳಿಸಿಕೊಂಡಿದ್ದರೆ 59 ರಿಂದ 28 ಸ್ಥಾನಕ್ಕೆ ಬರುತ್ತಿತ್ತೇ?
ಸಮ್ಮಿಶ್ರ ಸರ್ಕಾರ ಬಂದಮೇಲೆ ತನ್ನ ಗೌರವ ಹಾಳಾಯ್ತು ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಕುಮಾರಸ್ವಾಮಿಗೆ ಒಳ್ಳೆ ಇಮೇಜ್ ಇದ್ದದ್ದೇ ಆದರೆ ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆ ಏರಿಕೆಯಾಗುತ್ತಿತ್ತೇ ಹೊರತು ಕಡಿಮೆಯಾಗುತ್ತಿರಲಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ವಿಧಾನ ಪರಿಷತ್ ಚುನಾವಣೆ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ. ನಮ್ಮದು ಜಾತ್ಯಾತೀತ ಪಕ್ಷ ಎನ್ನುವ ಜೆಡಿಎಸ್ ಕೋಮುವಾದಿಗಳ ಪರವಾಗಿ ಮತ ಚಲಾಯಿಸುತ್ತದೋ, ವಿರುದ್ಧವಾಗಿ ಮತ ಚಲಾಯಿಸುತ್ತದೋ ಎಂಬುದನ್ನು ನೋಡಲು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಈಗಲೇ ರಾಜೀನಾಮೆ ನೀಡದಂತೆ ಹೇಳಿದ್ದೇನೆ" ಎಂದು ತಿಳಿಸಿದ್ದಾರೆ.
Published by:
MAshok Kumar
First published:
December 6, 2020, 7:22 PM IST