ಬೆಂಗಳೂರು (ನ. 1): ನಾವು ನವೆಂಬರ್ ಕನ್ನಡಿಗರಾಗದೇ, ವರ್ಷ ಪೂರ್ತಿ ಕನ್ನಡತನ ಹೊಂದಿರಬೇಕು. ತಂತ್ರಜ್ಞಾನ ನಮ್ಮ ಬದುಕನ್ನು ಆವರಿಸಿದೆ. ಇದು ನಮ್ಮ ಭಾಷೆ ಮತ್ತು ಬದುಕಿನ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ ತಂತ್ರಜ್ಞಾನದ ಬಳಕೆ ಮೂಲಕ ಕನ್ನಡವನ್ನು ಬೆಳೆಸಬೇಕು. ಆ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ಮುಂದಿನ ಒಂದು ವರ್ಷವನ್ನು 'ಕನ್ನಡ ಕಾಯಕ ವರ್ಷ' ಎಂದು ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸರಳವಾಗಿ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಷ್ಟ್ರ ಧ್ವಜಾರೋಹಣ ಮಾಡಿದರು. ಸಚಿವ ಎಸ್. ಸುರೇಶ್ ಕುಮಾರ್ ನಾಡ ಧ್ವಜಾರೋಹಣ ನೆರವೇರಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸರಳವಾಗಿ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಇವತ್ತು ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಪರವಾಗಿ ಪ್ರಧಾನಮಂತ್ರಿಗಳಿಗೆ ಧನ್ಯವಾದ ಹೇಳುತ್ತೇನೆ. 65ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಮುಂದಿನ ಒಂದು ವರ್ಷವನ್ನು ಕನ್ನಡ ಕಾಯಕ ವರ್ಷ ಎಂದು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕೆ ತಕ್ಕ ರೂಪುರೇಷೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಕೊವೀಡ್ ನಮ್ಮ ರಾಜ್ಯದ ಮೇಲೆ ಪರಿಣಾಮ ಬೀರಿದೆ. ಆದರೆ, ನಮ್ಮ ಸರ್ಕಾರ ಅದನ್ನು ದಿಟ್ಟವಾಗಿ ಎದುರಿಸಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮಾಡುವ ಮೂಲಕ ಕೊರೋನಾ ಮಹಾಮಾರಿಯನ್ನು ಓಡಿಸಬೇಕು. ರಾಜ್ಯದಲ್ಲಿ ನೆರೆ ಉಂಟಾಗಿ ರೈತಾಪಿ ವರ್ಗ, ಕೃಷಿ ವಲಯ, ಆರ್ಥಿಕ ವಲಯಕ್ಕೆ ತೊಂದರೆಯಾಗಿದ್ದರೂ ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇದನ್ನೂ ಓದಿ: Kannada Rajyotsava: ಅಚ್ಚ ಕನ್ನಡದಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಕನ್ನಡಕ್ಕಾಗಿ ಕಿರುಬೆರಳೆತ್ತಿದರು ಸಾಕು, ಅದೇ ಗೋವರ್ಧನ ಗಿರಿ ಆಗುತ್ತದೆ ಎಂದು ರಾಷ್ಟ್ರಕವಿ ಕುವೆಂಪು ಹೇಳಿದ ಮಾತುಗಳು ನನಗೆ ನೆನೆಪಿಗೆ ಬರುತ್ತದೆ. ಕನ್ನಡದ ಉಳಿವಿಗಾಗಿ ಹೆಚ್ಚೆಚ್ಚು ಕನ್ನಡ ಬಳಸಬೇಕು. ದೈನಂದಿನ ಚಟುವಟಿಕೆಗಳಲ್ಲಿ ಕನ್ನಡವನ್ನೇ ಮಾತನಾಡಬೇಕು, ಬರೆಯಬೇಕು. ಮನೆಗಳಲ್ಲಿ ಮಕ್ಕಳ ಜೊತೆ ಮಾತೃಭಾಷೆಯಲ್ಲೇ ಮಾತನಾಡಬೇಕು. ಮಕ್ಕಳು ಕನ್ನಡ ಭಾಷೆ ಕಲೆಯುವುದರಿಂದ ಮತ್ತು ಹೆಚ್ಚೆಚ್ಚು ಬಳಸುವುದರಿಂದ ನಮ್ಮ ಭಾಷೆ ಜೀವಂತವಾಗಿರುತ್ತದೆ. ಬಳಸಿದ ಹಾಗೇ ಭಾಷೆ ಬೆಳೆಯುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೊರೊನಾ ಅವಧಿಯಲ್ಲಿ ದುರ್ಬಲ ಕುಟುಂಬದ ಮಕ್ಕಳು ಸರ್ಕಾರಿ ಶಾಲೆಯತ್ತ ಮುಖ ಮಾಡಿದ್ದಾರೆ. ಸುಮಾರು 90 ಸಾವಿರ ಮಕ್ಕಳು ಸರ್ಕಾರಿ ಶಾಲೆಗೆ ಸೇರ್ಪಡೆಯಾಗಿದ್ದಾರೆ. ಇದು ಕಳೆದ 14 ವರ್ಷಗಳ ದಾಖಲೆಯಾಗಿದೆ. ಕೊರೊನಾ ಶಿಕ್ಷಣ ಇಲಾಖೆ ಕಾರ್ಯ ಮತ್ತು ಕಾರ್ಯಕ್ರಮದ ಮೇಲೆ ವಿಪರೀತ ಪರಿಣಾಮ ಬೀರಿದೆ. ಕಳೆದ ವರ್ಷ ಇದೇ ಮೈದಾನದಲ್ಲಿ ಶಾಲಾ ಮಕ್ಕಳು ತುಂಬಿದ್ದರು, ಮಕ್ಕಳ ಕಲರವ ಜೋರಾಗಿತ್ತು. ಕೊರೊನಾ ನಮ್ಮ ಕನ್ನಡತನವನ್ನು ಕಸಿದುಕೊಳ್ಳಲು ಸಾದ್ಯವಿಲ್ಲ. ನಮ್ಮ ಸಂಭ್ರಮವನ್ನ ಕೊರೋಆ ಕಸಿದುಕೊಂಡಿದೆ. ಆದರೆ, ನಮ್ಮ ನಾಡಿನ ಸಂಕಲ್ಪವನ್ನು ಕಸಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ