ಬೆಂಗಳೂರು: ಇಂದಿನಿಂದ (ಶುಕ್ರವಾರ) ವಿಧಾನಮಂಡಲ ಅಧಿವೇಶನ (Karnataka Assembly Session) ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಉಭಯ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಭಾಷಣ ಮಾಡಲಿದ್ದು, ಈ ವೇಳೆ ಸದನದಲ್ಲಿ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರು ವಿವರಿಸಲಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegade Kageri) ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಈಗಾಗಲೇ ಜಂಟಿ ಅಧಿವೇಶನಕ್ಕೆ ಆಗಮಿಸಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಂತೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದಾರೆ.
ವಿಧಾನಸೌಧದ ಗ್ರಾಂಡ್ ಸ್ಟೆಪ್ಗಳ ಮೂಲಕ ರಾಜ್ಯಪಾಲರು ಸದನಕ್ಕೆ ಆಗಮಿಸಲಿದ್ದು, ರಾಜ್ಯಪಾಲರ ಭಾಷಣದ ಬಳಿಕ ಸಂತಾಪ ಸೂಚನೆ ನಡೆಯಲಿದೆ. ಇದಾದ ಬಳಿಕ ಕಲಾಪವನ್ನು ಸ್ಪೀಕರ್ ಮುಂದೂಡಲಿದ್ದಾರೆ. ಸೋಮವಾರದಿಂದ ಕಲಾಪಗಳು ನಡೆಯಲಿದ್ದು, ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
ವಿಧಾನಮಂಡಲ ಅಧಿವೇಶನದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ. ಸದನವು ಪ್ರಜಾಪ್ರಭುತ್ವದ ದೇಗುಲವಾಗಿದೆ. ಈ ಅರಿವು ಎಲ್ಲಾ ಸದಸ್ಯರಿಗೂ ಇದೆ. ಈ ನಿಟ್ಟಿನಲ್ಲಿ ತಮ್ಮ ಸಲಹೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಫೆಬ್ರವರಿ 10 ರಿಂದ ನಡೆಯಲಿರುವ ಜಂಟಿ ಅಧಿವೇಶನ ಹಾಗೂ ಫೆಬ್ರವರಿ 17 ರಿಂದ ನಡೆಯಲಿರುವ ಆಯವ್ಯಯ ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆಯೂ ಶಾಸಕರಿಗೆ ಕೋರಿದ್ದಾರೆ.
ಪ್ರಮುಖರನ್ನು ಸೇರಿದಂತೆ ಹೆಚ್ಚಿನ ಮಂದಿ ಗೈರು ಸಾಧ್ಯತೆ
ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗುತ್ತಿರುವ ಹಿನ್ನೆಲೆ ಮತ್ತೊಂದೆಡೆ ಚುನಾವಣೆ ಕೂಡ ಸಮೀಪಿಸುತ್ತಿರುವುದರಿಂದ ಮತಕ್ಷೇತ್ರದಲ್ಲಿ ಚುನಾವಣೆ ಕಾವು ಜೋರಾಗಿದೆ. ಆಡಳಿತ ಪಕ್ಷ ಬಿಜೆಪಿ, ವಿರೋಧ ಪಕ್ಷ ಕಾಂಗ್ರೆಸ್, ಜೆಡಿಎಸ್ ಬಹುತೇಕ ಶಾಸಕರು ವಿವಿಧ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಇದರಿಂದಾಗಿ ಅಧಿವೇಶನಕ್ಕೆ ಸಾಕಷ್ಟು ಮಂದಿ ಗೈರಾಗುವ ಸಾಧ್ಯತೆಗಳಿವೆ.
ಪಕ್ಷಗಳ ಸಮಾವೇಶ ಜೋರು
ಜೆಡಿಎಸ್ ಪಂಚರತ್ನ ಯಾತ್ರೆ, ಕಾಂಗ್ರೆಸ್ನಿಂದ ಪ್ರಜಾಧ್ವನಿ ಯಾತ್ರೆ ನಡೆಯುತ್ತಿದೆ. ಹೀಗಾಗಿ, ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ನ ಪ್ರಮುಖ ಮುಖಂಡರೇ ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆ ಇದೆ.
ವಿಧಾನ ಸೌಧದಲ್ಲಿ ಸಿದ್ಧತೆ
ಉಭಯ ಸದನಗಳ ಜಂಟಿ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ರಾಜ್ಯಪಾಲರನ್ನು ಸ್ವಾಗತಿಸಲು ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಕಾರ್ಯಕಲಾಪಗಳ ಪಟ್ಟಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ