ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election ) 136 ಸ್ಥಾನಗಳನ್ನು ಪಡೆದುಕೊಳ್ಳುವುದರೊಂದಿಗೆ ಕಾಂಗ್ರೆಸ್ (Congress) ಸ್ಪಷ್ಟ ಬಹುಮತ ಪಡೆದಿದೆ. ಇತ್ತ ಕೇವಲ 65 ಸ್ಥಾನಗಳಲ್ಲಿ ಗೆಲುವು ಪಡೆದಿರುವ ಬಿಜೆಪಿ (BJP) ವಿರೋಧ ಪಕ್ಷದ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಇದರ ನಡುವೆಯೇ ಇಂದು ಸಂಜೆ ವೇಳೆಗೆ ರಾಜ ಭವನಕ್ಕೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜ್ಯಪಾಲರಿಗೆ (Governor) ರಾಜೀನಾಮೆ ಪತ್ರ ನೀಡಿದ್ದಾರೆ. ಬಿಜೆಪಿ ಸೋಲಿಗೆ ನೈತಿಕ ಹೊಣೆ ಹೊತ್ತು ಕೊಂಡಿರುವ ಬಸವರಾಜ ಬೊಮ್ಮಾಯಿ ಅವರು, ರಾಜಭವನದಲ್ಲಿ ಗವರ್ನರ್ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾಗಿದ್ದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಳಿಕ ಅಚ್ಚರಿಯ ಆಯ್ಕೆಯಂತೆ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದರು. 2021ರ ಜುಲೈ 26 ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಬೊಮ್ಮಾಯಿ ಅವರು, 19 ತಿಂಗಳು 17 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಯಡಿಯೂರಪ್ಪರ ನಿವೃತ್ತಿ ಘೋಷಣೆಯಿಂದ ಬಯಸದೇ ಬಂದ ಭಾಗ್ಯದಂತೆ ಮುಖ್ಯಮಂತ್ರಿ ಪದವಿ ಅಲಂಕರಿಸಿದ್ದರು.
ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ
ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ, ಪಕ್ಷಕ್ಕೆ ಆದ ಹಿನ್ನಡೆಯನ್ನು ನಾನೇ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು, ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದರೂ, ಕಡಿಮೆ ಸೀಟು ಬಂದಿವೆ. ಏನೇ ಆಗಲಿ ಸೋಲು ಸೋಲೇ. ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ, ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ 2023 LIVE: ಸಿಎಂ ಕುರ್ಚಿ ಯಾರಿಗೆ? ಖರ್ಗೆ ನಿವಾಸದಲ್ಲಿ ಡಿಕೆಶಿ ಬ್ರದರ್ಸ್ ಮೀಟಿಂಗ್
ಸುದೀಪ್ ಸೋಲಿಗೆ ಹೊಣೆ ಅನ್ನೋದು ಸರಿಯಲ್ಲ
ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ. ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ, ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡ್ತೀವಿ. ಏನು ವ್ಯತ್ಯಾಸ ಆಗಿದೆ ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ. ಸುದೀಪ್ ರಾಜಕಾರಣಿ ಅಲ್ಲ, ಸೋಲಿಗೆ ಅವರನ್ನು ಹೊಣೆ ಅನ್ನೋದು ಸರಿಯಲ್ಲ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ