ಬೆಂಗಳೂರು: ಗೂಳಿ ಸ್ಪರ್ಧೆ (Bull competition), ಎತ್ತಿನ ಗಾಡಿ ಓಟದ ಸ್ಪರ್ಧೆ (Bullock cart Race) ನಡೆಸಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ (Karnataka High Court) ಅವಕಾಶ ಮಾಡಿಕೊಟ್ಟಿದೆ. ಆದರೆ, ಓಟದ ಸಂಬಂಧ ಸುಪ್ರೀಂಕೋರ್ಟ್ (Supreme Court) ವಿಧಿಸಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸೂಚಿಸಿ, ಈ ಸಂಬಂಧ ಸಲ್ಲಿಕೆಯಾಗಿದ್ದ ಮನವಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.
ಮಂಡ್ಯ ಜಿಲ್ಲೆಯಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮೈಸೂರು ಪ್ರಾಣಿ ದಯಾ ಸಂಘ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. 2021ರ ಮಾರ್ಚ್ನಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಗೊಳಿಸಬೇಕು. ರಾಜ್ಯದಲ್ಲಿ ನಡೆಯುವ ಎತ್ತಿನ ಗಾಡಿ ಓಟದ ಸ್ಪರ್ಧೆ ಮತ್ತು ಗೂಳಿ ಸ್ಪರ್ಧೆಗಳ ಮೇಲೆ ನಿಗಾ ಇಡುವಂತೆ ಪ್ರಾಣಿ ಕಲ್ಯಾಣ ಮಂಡಳಿಗೆ ಆದೇಶ ಮಾಡಬೇಕು ಎಂದೂ ಮನವಿ ಮಾಡಲಾಗಿತ್ತು.
“ಚಕ್ಕಡಿ, ಗೂಳಿ, ಕಂಬಳ ಸ್ಪರ್ಧೆ ನಡೆಸಲು ಅನುಮತಿಸಲು ಅಗತ್ಯವಾದ ಶಾಸನಬದ್ಧ ನಿಬಂಧನೆಗಳು ಜಾರಿಯಲ್ಲಿ ಇರುವುದರಿಂದ ಹೆಚ್ಚಿನ ಆದೇಶದ ಅಗತ್ಯವಿಲ್ಲ. ಮೇಲೆ ಹೇಳಲಾದ ಷರತ್ತುಗಳಿಗೆ ಒಳಪಟ್ಟು ರಾಜ್ಯ ಸರ್ಕಾರವು ಶಾಸನಬದ್ಧ ನಿಬಂಧನೆಗಳ ಅನ್ವಯ ಅನುಮತಿ ನೀಡಬೇಕು” ಎಂದು ವಿಭಾಗೀಯ ಪೀಠ ಹೇಳಿತು.
ರಾಜ್ಯದಲ್ಲಿ ಪರಂಪರಾಗತವಾಗಿ ಕೆಲ ಆಚರಣೆಗಳು ಅಸ್ತಿತ್ವದಲ್ಲಿದ್ದು, ಪ್ರಾಣಿಗಳಿಗೆ ಹಿಂಸೆ ಆಗದಂತೆ ತಡೆಯಲು ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೀಠ ಹೇಳಿತು. ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಸಲು ಕಳೆದ ಮಾರ್ಚ್ನಲ್ಲಿ ಅನುಮತಿ ನೀಡಲಾಗಿತ್ತಾದರೂ ಕೋವಿಡ್ ಮತ್ತಿತರ ಕಾರಣಗಳ ಹಿನ್ನೆಲೆಯಲ್ಲಿ ಅನುಮತಿ ಹಿಂಪಡೆಯಲಾಗಿತ್ತು.
2017ರಲ್ಲಿ ಕಾಯಿದೆಗೆ ತಿದ್ದುಪಡಿ ಮಾಡಲಾಗಿದ್ದು, ಅದು 2018ರ ಫೆಬ್ರವರಿ 20ರಲ್ಲಿ ಜಾರಿಗೆ ಬಂದಿದೆ. ತಿದ್ದುಪಡಿ ಕಾಯಿದೆಯ ಸೆಕ್ಷನ್ 6ರ ಪ್ರಕಾರ ಪ್ರಧಾನ ಕಾಯಿದೆಯ ಸೆಕ್ಷನ್ 27ರಲ್ಲಿ ಕಲಂ (ಬಿ) ಬಳಿಕ ಕೆಳಗಿನ ಅಂಶಗಳನ್ನು ಸೇರ್ಪಡೆಗೊಳಿಸಲಾಗಿದೆ. ʼಸಿʼ ಅಡಿ ಪರಂಪರಾಗತ ಸಂಪ್ರದಾಯ ಮತ್ತು ಸಂಸ್ಕೃತಿ ರಕ್ಷಿಸುವ ದೃಷ್ಟಿಯಿಂದ ಮತ್ತು ಎಮ್ಮೆಗಳ ನಾಟಿ ತಳಿ ರಕ್ಷಣೆ ಮತ್ತು ಅಸ್ತಿತ್ವದ ದೃಷ್ಟಿಯಿಂದ ಕಂಬಳ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ. ʼಡಿʼ ಅಡಿ ದೇಶಿ ತಳಿಯ ಗೋವುಗಳ ಸಂರಕ್ಷಣೆ ಮತ್ತು ರೂಢಿಗತ ಸಂಪ್ರದಾಯವನ್ನು ಮುಂದುವರಿಸುವ ಉದ್ದೇಶದಿಂದ ಗೂಳಿ, ಎತ್ತು, ಎತ್ತಿನ ಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ಮಾಡಿಕೊಡಲಾಗಿದೆ” ಎಂದು ಹೇಳಲಾಗಿದೆ.
“ಕಾಯಿದೆಯಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆ ನಡೆಸಲು ಅನುಮತಿ ಕಲ್ಪಿಸಲಾಗಿದೆ. ಅಲ್ಲದೇ, ಶಾಸನಬದ್ಧ ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಲಾಗಿಲ್ಲ. ಮಹಾರಾಷ್ಟ್ರದಲ್ಲಿ ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಅನುಮತಿ ನೀಡುವಾಗ ಶಿವಾಜಿರಾವ್ ಅಧಾಲ್ರಾವ್ ಪಾಟೀಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಸರ್ಕಾರ ಪ್ರಕರಣದಲ್ಲಿ ಕೆಲವು ಷರತ್ತುಗಳನ್ನು ಸುಪ್ರೀಂ ಕೋರ್ಟ್ ವಿಧಿಸಿದ್ದು, ಅದೇ ಷರತ್ತುಗಳನ್ನು ಇಲ್ಲಿಯೂ ಅನ್ವಯಿಸಬೇಕು” ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ