ಶಿವಮೊಗ್ಗ (ಮಾ. 8): ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಒಟ್ಟು 15 ಸ್ಥಳಗಳಲ್ಲಿ 45 ಎಕರೆ ಪ್ರದೇಶವನ್ನು ಹಸಿರೀಕರಣಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದ ಕೀರ್ತಿ ನಗರದ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಹಿತಿ ನೀಡಿದರು.
6 ತಿಂಗಳ ಅವಧಿಯಲ್ಲಿ 8,630 ಸಸಿಗಳನ್ನು ನೆಡುವ ಕಾರ್ಯಕ್ರಮ ಇದಾಗಿದೆ. ಇದಕ್ಕೆ 2.46 ಕೋಟಿ ರೂ. ವೆಚ್ಚವಾಗಲಿದ್ದು, ಸ್ಥಳೀಯ 50 ಬಗೆಯ ಸಸ್ಯ ಪ್ರಭೇದಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಇದರಲ್ಲಿ 15 ವಿವಿಧ ಜಾತಿಯ ಹಣ್ಣು ಬಿಡುವ ಮರಗಳು, 13 ವಿವಿಧ ಹೂ ಬಿಡುವ ಸಸಿಗಳು, 8 ವಿವಿಧ ಜಾತಿಯ ಫಿಕಸ್ ಸಸಿಗಳನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದರು.
ಗುತ್ತಿಗೆದಾರರು ಮೂರು ವರ್ಷಗಳ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳುವ ಶರತ್ತನ್ನು ವಿಧಿಸಲಾಗಿದೆ ಎಂದರು. ಸಾರ್ವಜನಿಕರ ಸಹಯೋಗದಲ್ಲಿ ಶಿವಮೊಗ್ಗ ನಗರವನ್ನು ಹಸಿರೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: Karnataka Budget 2021 LIVE: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಂದ 8ನೇ ಬಾರಿ ಇಂದು ಬಜೆಟ್ ಮಂಡನೆ
ಶಿವಮೊಗ್ಗ ನಗರದಲ್ಲಿ ಶುದ್ಧ ಗಾಳಿ, ಉತ್ತಮ ವಾತಾವರಣ ನಿರ್ಮಿಸಲು ಸ್ಮಾರ್ಟ್ ಸಿಟಿ ಯೋಜನೆಯಡಿ ಹಸಿರೀಕರಣ ಯೋಜನೆ ಕೈಗೆತ್ತಿ ಕೊಳ್ಳಲಾಗಿದ್ದು, ಈಗಾಗಲೇ ಹಲವು ಭಾಗಗಳಲ್ಲಿ ಸಸಿ ನೆಡುವ ಕಾರ್ಯ ಪೂರ್ಣಗೊಂಡಿದೆ. ಸ್ಮಾರ್ಟ್ ಸಿಟಿ ಯೋಜನೆಯ ಪರಿಕಲ್ಪನೆಗೆ ಪೂರಕವಾಗಿ ಹಸಿರೀಕರಣ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಜನರಿಗೆ ವಾಸಯೋಗ್ಯ ಪರಿಸರ, ವಿಪುಲ ಆರ್ಥಿಕ ಅವಕಾಶ ಕಲ್ಪಿಸುವ ಸುಧಾರಿತ ಗುಣಮಟ್ಟದ ನಗರ ಆಡಳಿತ ವ್ಯವಸ್ಥೆ ರೂಪಿಸುವುದು ಯೋಜನೆ ಉದ್ದೇಶ ಎಂದು ಹೇಳಿದರು. ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ