ಬೆಂಗಳೂರು (ಡಿ. 17): ಸುಮಾರು 2 ವಾರಗಳಿಂದ ಕಡಿಮೆಯಾಗಿದ್ದ ಮಳೆ ಕರ್ನಾಟಕದ ಹಲವು ಭಾಗಗಳಲ್ಲಿ ಇಂದಿನಿಂದ ಮತ್ತೆ ಆರ್ಭಟಿಸುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಇಂದು ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಅದರ ಪರಿಣಾಮವಾಗಿ ಕೇರಳ ಮತ್ತು ಕರ್ನಾಟಕದ ದಕ್ಷಿಣ ಮತ್ತು ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಇಂದಿನಿಂದ ಡಿ. 20ರವರೆಗೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಮಿಳುನಾಡಿನ ಗಡಿಯಲ್ಲಿರುವ ಬೆಂಗಳೂರು, ಚಾಮರಾಜನಗರ, ಮೈಸೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಇಂದು ಹಲವು ಕಡೆ ಹಗುರವಾದ ಮಳೆ, ಇನ್ನೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ: Gold Rate Today: ಬೆಂಗಳೂರಿನಲ್ಲಿ 50 ಸಾವಿರ ರೂ. ದಾಟಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲೂ ಭಾರೀ ಏರಿಕೆ
ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ನಲ್ಲಿ ಇಂದಿನಿಂದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಡಿಸೆಂಬರ್ 22ರವರೆಗೂ ಮಳೆ ಮುಂದುವರಿಯಲಿದೆ. ಜೊತೆಗೆ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರ ಪ್ರದೇಶದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಭಾರತದಲ್ಲೂ ಶೀತಗಾಳಿ ಬೀಸುತ್ತಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇಂದು ವಿಪರೀತ ಚಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ