ಬೆಂಗಳೂರು (ಜೂನ್ 3): ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕರ್ನಾಟಕದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇನ್ನೂ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆಯಾಗುವುದರಿಂದ ಒಟ್ಟು 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ.
ಇಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶಿಸಲಿದೆ. ಹೀಗಾಗಿ, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?:
ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: CBSE, CISCE 12ನೇ ತರಗತಿ ಪರೀಕ್ಷೆಗಳು ರದ್ದು; ಫಲಿತಾಂಶದ ಮಾನದಂಡಗಳೇನು? ಇಲ್ಲಿದೆ ಮಾಹಿತಿ
ಈ ವರ್ಷ ಮುಂಗಾರು ಮಳೆ ಕೊಂಚ ತಡವಾಗಿದ್ದು, ಇಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಮುಂಗಾರಿನ ಪ್ರವೇಶವಾಗಲಿದೆ. ಇಂದಿನಿಂದ ಜೂನ್ 5ರವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.
ಇದನ್ನೂ ಓದಿ: Mehul Choksi | ಮೆಹುಲ್ ಚೋಕ್ಸಿ ಭಾರತಕ್ಕೆ ಗಡಿಪಾರು?; ಡೊಮಿನಿಕಾ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
ಕರ್ನಾಟಕದಲ್ಲಿ ಇನ್ನು ಮೂರು ದಿನಗಳೊಳಗೆ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ