ಕೊಪ್ಪಳ (ಫೆ. 26): ಮಠ ಮಾನ್ಯಗಳು ಧಾರ್ಮಿಕ ಹಾಗೂ ಭಕ್ತಿಯ ಕೇಂದ್ರಗಳು ಎಂಬ ಭಾವ ಬಹುತೇಕರಲ್ಲಿದೆ. ಮಠಗಳೆಂದರೆ ಹಾಗಿರುವುದು ಸಹಜವೇ. ಆದರೆ ಕೊಪ್ಪಳ ಜಿಲ್ಲೆಯೊಂದರ ಮಠ ಸದಾ ವಿವಾದದ ಕೇಂದ್ರ ಬಿಂದು. ಇದಕ್ಕೆಲ್ಲ ಕಾರಣ ಮಠಾಧಿಪತಿಯ ಕುಟುಂಬಸ್ಥರು! ಜಿಲ್ಲೆಯ ಅಳವಂಡಿಯಲ್ಲಿರುವ ಶ್ರೀ ಸಿದ್ಧೇಶ್ವರ ಮಠ ಸದ್ಯ ವಿವಾದದ ತಾಣವಾಗಿದೆ. ಈಚೆಗಷ್ಟೇ ವಿಜೃಂಭಣೆಯಿಂದ ಜಾತ್ರಾಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯಿತು. ರಥೋತ್ಸವದ ಕ್ಷಣಗಳು ಈಗ ಮಠದ ಭಕ್ತರಲ್ಲಿ ಮತ್ತು ಮಠಾಧಿಪತಿಯ ಕುಟುಂಬಸ್ಥರಲ್ಲಿ ಕೋಲಾಹಲ ಸೃಷ್ಟಿಯಾಗುವಂತೆ ಮಾಡಿವೆ. ರಥದ ಗಾಲಿಗೆ ಹುಟ್ಟು ಮತ್ತು ಸೊನ್ನಿ ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕುಟುಂಬಸ್ಥರು ತಕರಾರು ಮಾಡಿಕೊಂಡಿದ್ದಾರೆ.
ಪ್ರತಿ ವರ್ಷದಂತೆ ತೇರು ಎಳೆಯುವ ಸಂದರ್ಭದಲ್ಲಿ ರಥದ ಗಾಲಿಗೆ ಹುಟ್ಟು ಸೊನ್ನಿ ಹಾಕಲಾಗುತ್ತದೆ . ಬೈರಾಪುರ ಗ್ರಾಮಸ್ಥರು ಮತ್ತು ಅಳವಂಡಿ ಗ್ರಾಮಸ್ಥರು ಒಟ್ಟಾಗಿ ಈ ಕಾರ್ಯ ಮಾಡುತ್ತಿದ್ದರು. ಒಂದು ಚಕ್ರಕ್ಕೆ ಬೈರಾಪುರ ಗ್ರಾಮದ ಭಕ್ತರು ಸೊನ್ನಿ ಹಾಕಿದ್ದಾರೆ. ಅದರಿಂದ ಯಾವ ತೊಂದರೆಯೂ ಆಗಿಲ್ಲ. ಇನ್ನೊಂದು ಚಕ್ರಕ್ಕೆ ಅಳವಂಡಿಯವರು (ಅವರು ಪ್ರತಿ ವರ್ಷ ಹಾಕುತ್ತಿದ್ದವರೇ) ಸೊನ್ನಿ ಹಾಕಿದ್ದಾರೆ. ಅದು ಸಡಿಲವಾಗಿದ್ದರಿಂದ ತೇರೆಳುವಾಗ ರಥ ಅಲುಗಾಡಿದೆಯೇ ಹೊರತು ಯಾವ ಅನಾಹುತವೂ ಸಂಭವಿಸಿಲ್ಲ. ಇದನ್ನೇ ನೆಪ ಮಾಡಿಕೊಂಡ ಸ್ವಾಮೀಜಿ ಕುಟುಂಬಸ್ಥರು "ಜಾತ್ರೆಗೆ ನಿಮ್ಮನ್ಯಾರು ಕರೆದವರು?" ಎಂದು ದರ್ಪ ಮೆರೆದಿದ್ದಾರೆ. ದರ್ಪದ ಈ ನುಡಿ, ಗ್ರಾಮಸ್ಥರ ಸ್ವಾಭಿಮಾನಕ್ಕೆ ಧಕ್ಕೆ ತಂದು ಆಕ್ರೋಶದ ಕಿಡಿಯಾಗಿ ಹೊತ್ತಿಕೊಂಡಿದೆ.
![koppala alavandi siddeshwara mutt in controversy]()
ರಥೋತ್ಸವ ಚಿತ್ರಣ
ಇದು ಮಠದ ಕೆಲಸ, ಮಾತನಾಡಬೇಕಾದವರು ಸ್ವಾಮೀಜಿಯೇ ಹೊರತು, ಸ್ವಾಮೀಜಿಯ ಕುಟುಂಬಸ್ಥರಲ್ಲ. ಕುಟುಂಬಸ್ಥರು ಮಠದ ಜಾಗವನ್ನು ಸ್ವಾಮೀಜಿಗೆ ಬಿಟ್ಟು ಕೊಟ್ಟು, ಬೇರೆಡೆ ಹೋಗಲಿ. ಮಠ ಎಂದರೆ ಭಕ್ತಿಕೇಂದ್ರವಾಗಬೇಕೇ ಹೊರತು ರಾಜಕೀಯ ಸಭೆ ನಡೆಸುವ ತಾಣವಾಗಬಾರದು. ಕುಟುಂಬಸ್ಥರು ರಾಜಕೀಯ ಪಕ್ಷವೊಂದರಲ್ಲಿ ಗುರುತಿಸಿಕೊಂಡಿದ್ದು, ಮೊದಲು ರಾಜಕೀಯ ಸಭೆಗಳನ್ನು ಮಠದಲ್ಲಿ ನಡೆಸುವ ಅನಿಷ್ಠ ಕೈ ಬಿಡಿ ಎಂಬ ಕೂಗು ಮಾರ್ದನಿಸುತ್ತಿದ್ದಂತೆ, ಗ್ರಾಮಸ್ಥರು ಮತ್ತು ಸ್ವಾಮೀಜಿ ಕುಟುಂಬಸ್ಥರ ನಡುವೆ ದೊಡ್ಡ ವಾಗ್ವಾದವೇ ನಡೆದಿದೆ.
ಕೊನೆಗೂ ಗ್ರಾಮದ ಹಿರಿಯ ಮುಖಂಡರು ಮಧ್ಯಸ್ಥಿಕೆ ವಹಿಸಿ ಸಂಧಾನ ಮಾಡಿದ್ದಾರೆ. ಈ ಸಂಧಾನ ತಾತ್ಕಾಲಿಕವಷ್ಟೇ. ಇಂಥ ಹತ್ತು ಹಲವು ಪಂಚಾಯಿತಿಗಳನ್ನು ಅಳವಂಡಿಯ ಶ್ರೀ ಸಿದ್ದೇಶ್ವರ ಮಠ ಕಂಡಿದೆ.
ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಅಳವಂಡಿಯ ಈಗಿನ ಸ್ವಾಮೀಜಿ ಕಳೆದ ವರ್ಷವಷ್ಟೇ ಪಟ್ಟಕ್ಕೆ ಬಂದಿದ್ದರು. ಅವರಿಗಿಂತ ಹಿಂದಿದ್ದ ಸ್ವಾಮೀಜಿ ಮುಂಡರಗಿ ಕಾಲೊಂದರಲ್ಲಿ ಪಾಠ ಮಾಡುತ್ತಿದ್ದರು. ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಪ್ರೇಮಾಂಕುರವಾಗಿ ಅವರು ಸನ್ಯಾಸತ್ಯ ತ್ಯಜಿಸಿದ್ದರು. ಈಗಿನ ಸ್ವಾಮೀಜಿ ಪೀಠಕ್ಕೆ ಬಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯ, ಕಾರ್ಯಕ್ರಮ ನಡೆಸುವ ಬದಲು ಕೇಕ್ ಕತ್ತರಿಸಿ ವರ್ಷಾಚರಣೆಯನ್ನು ಸಂಭ್ರಮಿಸಿದ್ದೂ ಸಹ ವಿವಾದವಾಗಿದ್ದನ್ನ ಸ್ಮರಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ