ಚಿಕ್ಕಬಳ್ಳಾಪುರ(ಫೆ.23): ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲೇ ಎರಡನೇ ಬಾರಿ ಇಂತಹ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲೇ, ಈ ಸ್ಫೋಟಕಗಳ ನಿರ್ವಹಣೆ, ಸಾಗಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು. ನೀತಿ-ನಿಯಮಗಳ ಕಟ್ಟುನಿಟ್ಟು ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ. ಆದರೆ ತನ್ನ ಆಂತರಿಕ ಸಮಸ್ಯೆಗಳಲ್ಲೇ ಮುಳುಗಿರುವ ಈ ಸರಕಾರಕ್ಕೆ ಇತ್ತ ಗಮನ ಹರಿಸಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಅಮೆರಿಕದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 5 ಲಕ್ಷಕ್ಕೂ ಅಧಿಕ; ಹೃದಯ ವಿದ್ರಾವಕ ಎಂದ ಬಿಡೆನ್
ಮಾಧ್ಯಮಗಳ ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಇಂತಹ ದುರಂತ ಮರುಕಳಿಸುತ್ತಿರಲಿಲ್ಲ ಎಂದು ಶಿವಕುಮಾರ್ ಅವರು ಕಿಡಿಕಾರಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಾಸ್ಪದವಾಗಿದೆ. ಹೇಳಿಕೆ ನೀಡುವ ಸರಕಾರದ ಪ್ರತಿನಿಧಿಗಳು ಜೋಕರ್ ಗಳಂತೆ ಕಾಣುತ್ತಿದ್ದಾರೆ. ಇದರ ಪರಿಣಾಮವೇ ಚಿಕ್ಕಬಳ್ಳಾಪುರದಲ್ಲಿ ಆರು ಮುಗ್ಧ ಜೀವಿಗಳ ಬಲಿ ಆಗಿರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಗಣಿಗಾರಿಕೆ ನಿಯಂತ್ರಣ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿಲ್ಲ ಎಂಬುದಕ್ಕೆ ಈ ದುರಂತ ಸಾಕ್ಷಿ. ಈ ಸರ್ಕಾರ ಹೇಳುವುದೊಂದು, ಮಾಡುವುದೊಂದು ಎಂದು ಕಿಡಿಕಾರಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ