ಬೆಂಗಳೂರು (ನ. 16): ಕೊರೋನಾದಿಂದ ಲಾಕ್ಡೌನ್ ಘೋಷಣೆಯಾದ ಬಳಿಕ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಗೆ ಭಾರೀ ನಷ್ಟ ಉಂಟಾಗಿದೆ. ಆರ್ಥಿಕ ಸಂಕಷ್ಟದಿಂದ ಸಾರಿಗೆ ನಿಗಮಗಳಿಗೆ ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು ಬಸ್ ದರ ಏರಿಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಸ್ ದರ ಏರಿಕೆ ಮಾಡಿದರೆ ಸಾರಿಗೆ ನಿಗಮಗಳ ನಷ್ಟ ಸರಿದೂಗಿಸಬಹುದು. ಈ ಹಿನ್ನೆಲೆಯಲ್ಲಿ ದರ ಏರಿಕೆ ಮಾಡಿದರೆ ಒಳ್ಳೆಯದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ಬಸ್ ದರ ಏರಿಕೆ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಬಸ್ ದರ ಏರಿಕೆ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಚರ್ಚೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ ಆರ್ಥಿಕ ಸಂಕಷ್ಟದಿಂದ ಸಾರಿಗೆ ನೌಕರರಿಗೆ ವೇತನ ವಿಳಂಬವಾದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈಗಾಗಲೇ ಸಾರಿಗೆ ನೌಕರರಿಗೆ ವೇತನ ನೀಡುವುದು ವಿಳಂಬವಾಗಿದೆ. ಹೀಗಾಗಿ, ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ, ವೇತನ ಸಮಸ್ಯೆ ಸರಿದೂಗಿಸುವ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ.
ಸರ್ಕಾರದಿಂದ ರಸ್ತೆ ಸಾರಿಗೆ ನಿಗಮಗಳಿಗೆ 400ರಿಂದ 500 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಬೇಡಿಕೆಯಿಡಲಾಗಿದೆ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಬಗ್ಗೆ ಸಿಎಂ ಯಡಿಯೂರಪ್ಪ ಸಮಾಲೋಚನೆ ನಡೆಸಿದ್ದಾರೆ.
ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯಿಂದ ಶೇ. 18ರಷ್ಟು ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ, ಇಂದಿನ ಸಭೆಯಲ್ಲಿ ಬಸ್ ಟಿಕೆಟ್ ದರದ ಏರಿಕೆ ಬಗ್ಗೆಯೂ ಗಂಭೀರ ಚರ್ಚೆಯನ್ನು ನಡೆಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ