ಬೆಂಗಳೂರು; ಟೊಯೋಟಾ ಕಂಪನಿಯ 40 ಜನ ಕಾರ್ಮಿಕರನ್ನು ಏಕಾಏಕಿ ವಜಾ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕಂಪನಿಯ ಎದುರು ಕಳೆದೊಂದು ವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಆಡಳಿತ ಮಂಡಳಿ ಕಾರ್ಮಿಕರ ಸಮಸ್ಯೆ ಆಲಿಸದೆ ಕಾರ್ಖಾನೆ ಲಾಕ್ಔಟ್ ಮಾಡಿದೆ. ಕಾರ್ಮಿಕರು ಮತ್ತು ಕಾರ್ಖಾನೆ ಆಡಳಿತ ಮಂಡಳಿ ನಡುವೆ ಉಂಟಾಗಿರುವ ಸಮಸ್ಯೆ ಅರಿತ ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಸಮಸ್ಯೆ ಪರಿಹಾರಕ್ಕಾಗಿ ನಾಳೆ ವಿಕಾಸಸೌಧದಲ್ಲಿ ಸಂಧಾನ ಸಭೆ ಕರೆದಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ಬೆಂಗಳೂರಿನ ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಲಾಕ್ ಔಟ್ ಆಗಿರುವ ವಿಷಯ ಸರಕಾರದ ಗಮನಕ್ಕೆ ಈಗಾಗಲೇ ಬಂದಿದೆ. ಅನೇಕ ಜನ ನೌಕರರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದನ್ನು ಗಮನಿಸಿದ್ದೆನೆ. ಕಾರ್ಖಾನೆ ನೌಕರರ ಹಾಗೂ ಆಡಳಿತ ಮಂಡಳಿಯ ನಡುವೆ ಉಂಟಾಗಿರುವ ಸಮಸ್ಯೆಯನ್ನು ಬಗೆಹರಿಸಲು ನಾಳೆ ಬೆಳಿಗ್ಗೆ 10 ಗಂಟೆಗೆ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರ ಜೊತೆಯಲ್ಲಿ ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಸಂಧಾನ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಟೊಯೋಟಾ ಕಂಪನಿಯ ಕಾರ್ಮಿಕರಿಗೆ ಅನ್ಯಾಯ; ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರ ಅಹೋರಾತ್ರಿ ಪ್ರತಿಭಟನೆ
ಈ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 4000ಕ್ಕೂ ಹೆಚ್ಚಿನ ನೌಕರರಿಗೆ ನ್ಯಾಯ ಒದಗಿಸುವುದು ಮತ್ತು ಆಡಳಿತ ಮಂಡಳಿಯವರಿಗೂ ಅನ್ಯಾಯವಾಗದ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕರು ಹಾಗೂ ಕಾರ್ಖಾನೆ ಆಡಳಿತ ಮಂಡಳಿಯವರಿಗೆ ಭರವಸೆ ನೀಡಿದ್ದಾರೆ.
ಕಾರ್ಖಾನೆಯಲ್ಲಿ ಕೆಲಸದ ಅವಧಿಯಲ್ಲಿ ತೀರಾ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುತ್ತಿದೆ. ಎರಡು ಗಂಟೆ ನಿರಂತರ ಕೆಲಸದ ಬಳಿಕ ಕೇವಲ 10 ನಿಮಿಷ ವಿಶ್ರಾಂತಿ ನೀಡಲಾಗುತ್ತದೆ. ಈ ಅವಧಿಯಲ್ಲಿ ನೀರು ಕುಡಿಯಲು ಹಾಗೂ ಶೌಚಾಲಯಕ್ಕೆ ತೆರಳಲು ಸಮಯವೂ ಸಾಲದು. ಮಧ್ಯದಲ್ಲಿ ನೀರು ಕುಡಿಯಬೇಕಾದರೂ ವ್ಯವಸ್ಥಾಪಕರಿಂದ ಅನುಮತಿ ಪಡೆಯಬೇಕು. ಅಲ್ಲದೇ ಕೆಲಸದ ಒತ್ತಡ ಹೆಚ್ಚಾಗಿದ್ದು, ಹೆಚ್ಚಿನ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಮಿಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಕಾರ್ಮಿಕ ಸಂಘದ ಪ್ರತಿನಿಧಿಗೆ ಅಮಾನತು ಶಿಕ್ಷೆ ನೀಡಲಾಗಿದೆ. ಜೊತೆಗೆ ಊಟದ ಸಮಯ, ಶೌಚಾಲಯಕ್ಕೆ ಹೋದ ಸಮಯವನ್ನು ಲೆಕ್ಕ ಹಾಕಿ ಸಂಬಳಕ್ಕೆ ಕತ್ತರಿ ಹಾಕುತ್ತಿದ್ದಾರೆ. ಕಾರ್ಮಿಕರನ್ನು ಕೀಳಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದು ಇಲ್ಲಿನ ಕಾರ್ಮಿಕರ ಗುರತರ ಆರೋಪವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ