Karnataka Rain Update: ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಹವಾಮಾನ ಇಲಾಖೆ ಮೂಲಗಳು ಸದ್ಯ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದೆ ಎಂದು ತಿಳಿಸಿದೆ. ಇನ್ನೂ 3 ದಿನಗಳವರಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ. ನಿನ್ನೆ ಕಾರ್ಕಳದಲ್ಲಿ 4 ಸೆಂಟಿಮೀಟರ್ ಮಳೆಯಾಗಿದ್ದು ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂಟಿಮೀಟರ್ ಮಳೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಶಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಇನ್ನು, ಶಿವಮೊಗ್ಗದ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಮುಂದುವರೆದಿದೆ. ಹೀಗಾಗಿ ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಗುರುವಾರ ಬೆಳಗ್ಗೆಯಿಂದ ತುಂಗಾ ಜಲಾಶಯಕ್ಕೆ ಹರಿವಿನ ಪ್ರಮಾಣ ಹೆಚ್ಚಾಗಿದೆ. ಇನ್ನು, ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿದೆ. ಕಳೆದ ಕೆಲ ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಕುಂದಾಪುರದಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಮೂರು ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Viral Video: ಮಂಗಗಳ ಯುದ್ಧ ನೋಡಿದ್ದೀರಾ? ನೂರಾರು ಕೋತಿಗಳು ರಸ್ತೆಗಳಿದು ಕಿತ್ತಾಡಿದ ವಿಡಿಯೋ ನೋಡಿ!
ಚಿಕ್ಕಮಗಳೂರಿನಲ್ಲಿ ಕಳೆದ 20 ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿತ್ತು. ಆದರೆ, ಮೊನ್ನೆ ರಾತ್ರಿಯಿಂದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ, ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೆಹೊನ್ನೂರು, ಬಣಕಲ್ ಭಾಗದಲ್ಲಿ ಸುರಿಯುತ್ತಿರೋ ರಣಮಳೆ, ಬೀಸುತ್ತಿರುವ ಭಾರೀ ಗಾಳಿಗೆ ಜನ ಭಯಭೀತರಾಗಿದ್ದಾರೆ. ಇಷ್ಟು ದಿನ ಮಳೆಗಾಗಿ ಆಕಾಶ ನೋಡ್ತಿದ್ದ ಮಲೆನಾಡಿಗರು ಈಗ ಆತಂಕದಲ್ಲಿ ಬದುಕುವಂತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ