ಮುನಿರತ್ನ 50-60 ಕೋಟಿಗೆ ಮಾರಿಕೊಂಡಿದ್ದಾರೆ: ಆರ್.ಆರ್. ನಗರ ಜೆಡಿಎಸ್ ಅಭ್ಯರ್ಥಿ ಕಿಡಿ
ಮುನಿರತ್ನ ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಸೇರಿದ್ದಾರೆ. ಅವರಿಗೆ ಜನರ ಮುಂದೆ ಬಂದು ಮತ ಕೇಳುವ ನೈತಿಕ ಹಕ್ಕು ಇಲ್ಲ ಎಂದು ಆರ್.ಆರ್. ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಟೀಕಿಸಿದ್ದಾರೆ.
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ 50 ರಿಂದ 60 ಕೋಟಿ ರೂ ಗೆ ತಮ್ಮನ್ನು ತಾವು ಮಾರಿಕೊಂಡಿದ್ದಾರೆ ಎಂದು ಮುನಿರತ್ನ ವಿರುದ್ಧ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಆರೋಪ ಮಾಡಿದರು. ಯಶವಂತಪುರ ವಾರ್ಡ್ನಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ. ಅವರಿಗೆ ಮತ್ತೆ ಜನರ ಬಳಿ ಹೋಗಿ ಮತ ಕೇಳಲು ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿವೆ. ನಾವು ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಕಾರ್ಯಕರ್ತರಿಗೆ ಕೃಷ್ಣಮೂರ್ತಿ ಕರೆ ನೀಡಿದರು.
ಮತ್ತಿಕೆರೆಯ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ, ಯಶವಂತಪುರ, ಬಿಇಎಂಎಲ್ ಬಡಾವಣೆ, ಐಟಿಐ ಲೇಔಟ್, ಜ್ಞಾನಭಾರತಿ, ಶ್ರೀನಿವಾಸನಗರ ವಾರ್ಡ್ನಲ್ಲಿ ಮನೆ ಮನೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷರಾದ ಆರ್. ಪ್ರಕಾಶ್ ಸೇರಿ ಅನೇಕ ಮುಖಂಡರು ಇದ್ದರು.
ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ತೆರವಾಗಿದ್ದ ಆರ್ ಆರ್ ನಗರ ಕ್ಷೇತ್ರಕ್ಕೆ ಇದೀಗ ಚುನಾವಣೆ ನಿಗದಿಯಾಗಿದೆ. ನವೆಂಬರ್ 3ಕ್ಕೆ ಚುನಾವಣೆ ನಡೆಯಲಿದ್ದು, 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಕಳೆದ ಬಾರಿ ಕಾಂಗ್ರೆಸ್ ಟಿಕೆಟ್ನಿಂದ ಗೆದ್ದಿದ್ದ ಮುನಿರತ್ನ ಈ ಬಾರಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆಗಿಳಿಸಿದ್ದಾರೆ. ಕಾಂಗ್ರೆಸ್ನಿಂದ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ನಿಂತಿದ್ದಾರೆ. ಜೆಡಿಎಸ್ನಿಂದ ಸ್ಥಳೀಯ ಕಾರ್ಯಕರ್ತ ವಿ. ಕೃಷ್ಣಮೂರ್ತಿ ಕಣಕ್ಕಿಳಿದಿದ್ದಾರೆ.
Published by:Vijayasarthy SN
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ