ಬೆಂಗಳೂರು: ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ (Corruption Case) ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರ ವಿರುದ್ಧ ಪೋಸ್ಟರ್ ಅಭಿಯಾನ (Poster Campaign) ಆರಂಭಗೊಂಡಿದೆ. ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಹುಡುಕಿಕೊಡಿ (MLA Missing Poster) ಎಂಬ ಪೋಸ್ಟರ್ ಅನ್ನು ರಾತ್ರಿ ಬೆಳಗಾಗೋದರೊಳಗೆ ಅಂಟಿಸಲಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಸಿಕ್ಕಿದರೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ಕೊಡಿ ಎಂದು ಬರೆಯಲಾಗಿದೆ.
ರಾಜಧಾನಿಯ ಹಲವು ಕಡೆಗಳಲ್ಲಿ ಅಂಟಿಸಲಾಗಿರುವ ಈ ಮಿಸ್ಸಿಂಗ್ ಪೋಸ್ಟರ್ನಲ್ಲಿ ಕಾಣೆಯಾಗಿರುವ ವ್ಯಕ್ತಿಗಳನ್ನು ಹುಡುಕಿ ಕೊಡುವಂತೆ ಮಾಹಿತಿ ಲಗತ್ತಿಸಲಾಗಿದೆ. ‘ಮೈಸೂರು ಸ್ಯಾಂಡಲ್ ಸೋಪ್ ಹಗರಣದ ಎ-1 ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ. 5.9 ಅಡಿ ಎತ್ತರ, ವಯಸ್ಸು-72, ಮೈ ಬಣ್ಣ- ಗೋದಿ ಬಣ್ಣ, ಕೊನೆಯ ಬಾರಿ ಕಾಣಿಸಿದ್ದು- ಸಿಎಂ ಕಚೇರಿಯಲ್ಲಿ, ನಾಪತ್ತೆಯಾದ ದಿನಾಂಕ- 01-03-2023, ಲೋಕಾಯುಕ್ತ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಈ ಎ-1 ಆರೋಪಿಯನ್ನು ದಯಮಾಡಿ ಹುಡುಕಿಕೊಡಿ. - ಅಸಮರ್ಥ 40% ಸರ್ಕಾರ’ ಎಂದು ಬರೆಯಲಾಗಿದೆ. ಅಲ್ಲದೇ ಎಲ್ಲಾದರೂ ಕಾಣಿಸಿಕೊಂಡರೆ 100 ನಂಬರ್ಗೆ ಕರೆ ಮಾಡಿ ಎಂದು ಲಗತ್ತಿಸಲಾಗಿದೆ.
ಇನ್ನು ಬೆಂಗಳೂರು ಮಾತ್ರವಲ್ಲದೇ, ಚನ್ನಗಿರಿಯಲ್ಲೂ ಹಲವು ಕಡೆಗಳಲ್ಲಿ ಈ ಪೋಸ್ಟರ್ ಅನ್ನು ಅಂಟಿಸಲಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಓಡಾಡುವ ಜಾಗದಲ್ಲೆಲ್ಲಾ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಅನ್ನು ಅಂಟಿಸಲಾಗಿದೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು!
ಇನ್ನು ಲೋಕಾಯುಕ್ತ ಪ್ರಕರಣದಲ್ಲಿ ಸಿಲುಕಿದ್ದ ಶಾಸಕ ವಿರೂಪಾಕ್ಷಪ್ಪ ಮಾಡಾಳ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಕೆಲ ದಿನಗಳಿಂದ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಎ-1 ಆರೋಪಿ ಮಾಡಾಳ್ ವಿರೂಪಾಕ್ಷಪ್ಪ, ನಿರೀಕ್ಷಣಾ ಜಾಮೀನು ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ನ ಏಕಸದಸ್ಯ ಪೀಠ, ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: Lokayukta Raid: KSDL ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಶಾಸಕ ಮಾಡಾಳ್; ಪುತ್ರನಿಗೆ ನ್ಯಾಯಾಂಗ ಬಂಧನ
48 ಗಂಟೆಯೊಳಗೆ ಸರೆಂಡರ್ ಆಗಬೇಕು
ಶಾಸಕ ವಿರೂಪಾಕ್ಷಪ್ಪ ಮಾಡಾಳ್ಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ನ ಏಕಸದಸ್ಯ ಪೀಠ, 48 ಗಂಟೆಯೊಳಗೆ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೇ 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆಯೂ ನ್ಯಾಯಾಲಯ ಸೂಚಿಸಿದೆ.
ಕಳೆದ ಆರು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ, ಭೂಗತವಾಗಿದ್ದುಕೊಂಡೇ ತನ್ನನ್ನು ತಾನು ರಕ್ಷಿಸಿಕೊಳ್ಳಲು ಎಲ್ಲಾ ಕಸರತ್ತುಗಳನ್ನು ಮಾಡಿದ್ದರು. ಪೊಲೀಸರು ವಿರೂಪಾಕ್ಷಪ್ಪ ಮಾಡಾಳ್ ಪತ್ತೆಗೆ ಹುಡುಕಾಟ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಲಂಚ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಲು ನಿರ್ಧರಿಸಿದ್ದಾರೆ. ವಿರೂಪಾಕ್ಷಪ್ಪ ಅವರು ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಿಗೆ ಅವರ ಬಗ್ಗೆ ಮಾಹಿತಿ ರವಾನಿಸಲು ತೀರ್ಮಾನಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ