ಬೆಂಗಳೂರು (ಮಾ. 31): ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಡಿ ಸಂಕಷ್ಟ ಎದುರಾಗಿದ್ದು, 28 ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದ ಸಿಡಿ ಯುವತಿ ನಿನ್ನೆ ಕೋರ್ಟ್ನಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿದ್ದರು. ಬಳಿಕ ಎಸ್ಐಟಿ ವಿಚಾರಣೆಗೂ ಉತ್ತರಿಸಿದ್ದರು. ಇಂದು ಮತ್ತೆ ದಾಖಲೆಗಳ ಸಮೇತ ಎಸ್ಐಟಿ ವಿಚಾರಣೆಗೆ ಯುವತಿ ಹಾಜರಾಗಿದ್ದು, ಸೂಕ್ತ ದಾಖಲೆಗಳನ್ನು ಸಾಬೀತುಪಡಿಸಿದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ, ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಂಬೈನ ಹೋಟೆಲ್ ಒಂದರಲ್ಲಿ ಬೀಡುಬಿಟ್ಟಿದ್ದು, ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನು ಪಡೆಯುವ ಸಾಧ್ಯತೆಯಿದೆ.
ನಿನ್ನೆಯೇ ಕರ್ನಾಟಕ ಬಿಟ್ಟು ಹೋಗಿರುವ ರಮೇಶ್ ಜಾರಕಿಹೊಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಹಿಂದೆ, ನಾನು ಯಾವ ತಪ್ಪೂ ಮಾಡಿಲ್ಲ. ಹೀಗಾಗಿ, ಜಾಮೀನು ಪಡೆಯುವ ಪ್ರಶ್ನೆಯೇ ಇಲ್ಲ. ನಾನು ತಪ್ಪು ಮಾಡಿದ್ದರೆ ನನ್ನನ್ನು ನೇಣಿಗೇರಿಸಲಿ. ನಾನು ತಪ್ಪೇ ಮಾಡಿಲ್ಲ ಎಂದ ಮೇಲೆ ನನ್ನನ್ನು ಬಂಧಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಹೀಗಾಗಿ, ನಾನು ಜಾಮೀನು ಪಡೆಯುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಆದರೀಗ ಯುವತಿ ಪ್ರತ್ಯಕ್ಷವಾದ ಬಳಿಕ ಬಂಧನದ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಅವರ ವಕೀಲರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಎಸ್ಐಟಿ ರಮೇಶ್ ಜಾರಕಿಹೊಳಿ ಅವರ ಚಲನವಲನಗಳನ್ನು ಗಮನಿಸುತ್ತಿದ್ದು, ಅವರು ಮುಂಬೈನಲ್ಲಿರುವ ಬಗ್ಗೆ ಎಸ್ಐಟಿಗೆ ಮಾಹಿತಿ ಸಿಕ್ಕಿದೆ. ನಿನ್ನೆ ರಾತ್ರಿಯೇ ಮುಂಬೈಗೆ ತೆರಳಿರೋ ರಮೇಶ್ ಜಾರಕಿಹೊಳಿ ಸದ್ಯ ಮುಂಬೈನ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ರಮೇಶ್ ಜಾರಕಿಹೊಳಿಗೆ ಅವರ ವಕೀಲರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Ramesh Jarkiholi CD Case: ಇಂದು ಮತ್ತೆ ಎಸ್ಐಟಿಯಿಂದ ಸಿಡಿ ಯುವತಿ ವಿಚಾರಣೆ; ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ
ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ಥೆ ಹೇಳಿಕೆ ಕೊಟ್ಟಿದ್ದಾರೆ. ತನಗೆ ಕೆಲಸ ಕೊಡಿಸುವುದಾಗಿ ಹಾಗೂ ಡಾಕ್ಯುಮೆಂಟರಿ ಮಾಡಲು ಪರ್ಮಿಷನ್ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅತ್ಯಾಚಾರ ಆರೋಪದ ಮೇಲೆ ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ಮ್ಯಾಜಿಸ್ಟ್ರೇಟ್ ಮುಂದೆಯೇ ಸಂತ್ರಸ್ಥೆ ಹೇಳಿಕೆ ಕೊಟ್ಟಿರುವುದರಿಂದ ಪ್ರಕರಣ ಗಂಭೀರ ಸ್ವರೂಪದ್ದಾಗಿದೆ. ಎಸ್ಐಟಿ ಮುಂದಿನ ಹೇಳಿಕೆಗಿಂತ ಮ್ಯಾಜಿಸ್ಟ್ರೇಟ್ ಮುಂದಿನ ಹೇಳಿಕೆ ಮಹತ್ವದ್ದಾಗಿರುತ್ತದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ರಮೇಶ್ ರಮೇಶ್ ಜಾರಕಿಹೊಳಿ ಅವರ ಬಂಧನ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ವಕೀಲರು ರಮೇಶ್ ಸೋದರ ಬಾಲಚಂದ್ರ ಜಾರಕಿಹೊಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ತಡರಾತ್ರಿಯವರೆಗೆ ವಕೀಲರ ಜೊತೆ ಚರ್ಚೆ ನಡೆಸಿರುವ ಬಾಲಚಂದ್ರ ಜಾರಕಿಹೊಳಿ ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.
ಕೂಡಲೇ ಸಿಆರ್ಪಿಸಿ 438 ಅಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ಒಳಿತು ಎಂದು ಬಾಲಚಂದ್ರ ಜಾರಕಿಹೊಳಿಗೆ ತಡರಾತ್ರಿ ನಡೆದ ವಕೀಲರ ಜೊತೆಗಿನ ಸಮಾಲೋಚನೆಯಲ್ಲಿ ಸಲಹೆ ನೀಡಲಾಗಿದೆ. ಆಪ್ತ ವಕೀಲರ ಸಲಹೆ ಮೇರೆಗೆ ರಮೇಶ್ ಜಾರಕಿಹೊಳಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸೋ ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ