ವಿಜಯಪುರ(ಫೆ. 25): ಮಾಜಿ ಸಚಿವ ಎಂ. ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯಬೇಕಿದ್ದು, ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದೆ. ಎರಡು ದಿನಗಳ ಹಿಂದೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ಸಿಂದಗಿಗೆ ಭೇಟಿ ನೀಡಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಬಿಜೆಪಿ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇದರ ಬೆನ್ನಲ್ಲಿಯೇ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಕೂಡ ಸಿಂದಗಿ ಪಟ್ಟಣದಲ್ಲಿ ಕುಂದುಕೊರತೆ ಸಭೆ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ.
ಬುಧವಾರ ನಡೆದ ಸಭೆಯಲ್ಲಿ 120ಕ್ಕೂ ಹೆಚ್ಚು ಜನ ನಾನಾ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 80 ಅರ್ಜಿಗಳನ್ನು ಸ್ಥಳದಲ್ಲಿಯೇ ಸ್ಪಂದಿಸುವ ಮೂಲಕ ಸರಕಾರ ಜನಪರವಾಗಿದೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದಾರೆ. ಇದೇ ವೇಳೆ ಬೈ ಎಲೆಕ್ಷನ್ ಕುರಿತೂ ಮಾತನಾಡಿರುವ ಅವರು, ಎರಡು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಿಂದಗಿಗೆ ಭೇಟಿ ನೀಡಲಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ಎರಡು ದಿನಗಳಿಂದ ಸಿಂದಗಿಯಲ್ಲಿದ್ದಾರೆ. ಇಲ್ಲಿನ ಹಿರಿಯರ ಜೊತೆ ಚರ್ಚೆ ಮಾಡುತ್ತಿದ್ದಾರೆ. ನಾವೂ ಕೂಡ ಕೋರ್ ಕಮಿಟಿ ಸಭೆ ಮಾಡುತ್ತಿದ್ದೇವೆ. ಎಲ್ಲ ರೀತಿಯಿಂದ ಪಕ್ಷದ ಸಂಘಟನೆಯನ್ನು ಮಾಡುತ್ತಿದ್ದೇವೆ. ಎರಡು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಇಲ್ಲಿಗೆ ಬರುವ ನಿರೀಕ್ಷೆಯಿದೆ. ಅವರೂ ಕೂಡ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಶೇ. 100 ರಷ್ಟು ಬಿಜೆಪಿ ಅಭ್ಯರ್ಥಿಯನ್ನು ಆರಿಸಿ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿಂದಗಿ ಬೈ ಎಲೆಕ್ಷನ್ ಸರಕಾರದ ಪಾಲಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಯತ್ನಾಳ ಸಿಎಂ ಮತ್ತು ಅವರ ಮಗ ವಿಜಯೇಂದ್ರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ. ಈಗ ಯತ್ನಾಳ ಅವರ ತವರು ಜಿಲ್ಲೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವ ಅನಿವಾರ್ಯತೆ ಇದೆ.
ಇದೇ ವೇಳೆ, ಸಿಂದಗಿ ಬೈ ಎಲೆಕ್ಷನ್ ನಲ್ಲಿ ಸ್ಪರ್ಧಿಸಲು ಬಿಜೆಪಿಯಲ್ಲಿ ನಾನಾ ನಾಯಕರೂ ಕಸರತ್ತು ಆರಂಭಿಸಿದ್ದಾರೆ. ಮಾಜಿ ಶಾಸಕ ಮತ್ತು ಸತತ ಎರಡು ಬಾರಿಗೆ ಆಯ್ಕೆಯಾಗಿದ್ದ ರಮೇಶ ಭೂಸನೂರ ಈಗ ಪ್ರಬಲ ಆಕಾಂಕ್ಷಿಯಾಗಿದ್ದು, ತಮ್ಮ ಬೆಂಬಲಿಗರು ಮತ್ತು ಹಿರಿಯ ನಾಯಕರ ಮೂಲಕ ಒತ್ತಡ ಹಾಕಿದ್ದಾರೆ.
ಮತ್ತೊಂದೆಡೆ, ಈಗ ಸಿಂದಗಿಯಲ್ಲಿ ಎಂ. ಸಿ. ಮನಗೂಳಿ ಅವರ ಅಕಾಲಿಕ ನಿಧನದಿಂದಾಗಿ ಬೈ ಎಲೆಕ್ಷನ್ ನಲ್ಲಿ ಅನುಕಂಪ ಯಾವ ರೀತಿ ನೆರವಾಗಲಿದೆ? ಇದು ಬಿಜೆಪಿ ಅಭ್ಯರ್ಥಿಯ ಆಯ್ಕೆಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? ಎಂದೂ ಕೂಡ ಬಿಜೆಪಿ ಈಗಾಗಲೇ ಸಾಕಷ್ಟು ಚರ್ಚೆ ನಡೆಸಿದೆ. ಈ ಬಾರಿ ಶತಾಯ ಗತಾಯ ಇಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಕಮಲ ಅರಳಿಸಲು ಶತಪ್ರಯತ್ನ ಮಾಡುತ್ತಿದೆ.
ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸಿಂದಗಿಗೆ ಅಭ್ಯರ್ಥಿಯನ್ನಾಗಿ ಮಾಡಿ ವಿಜಯಪುರ ಜಿಲ್ಲೆಯ ಮೇಲೆ ಹಿಡಿತ ಸಾಧಿಸಲು ಮತ್ತು ಈ ಮೂಲಕ ಯತ್ನಾಳ ಅವರನ್ನು ಸೈಡ್ ಲೈನ್ ಮಾಡಲು ಸಿಎಂ ಮತ್ತು ಅವರ ಬೆಂಬಲಿಗರು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈವರೆಗೆ ಈ ಕುರಿತು ಬಿಜೆಪಿಯ ಯಾವೊಬ್ಬ ನಾಯಕರೂ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ಅಲ್ಲದೇ, ಡಿಸಿಎಂ ಲಕ್ಷ್ಮಣ ಸವದಿ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ