• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಮೇಕೆದಾಟು ಯೋಜನೆ ವಿರುದ್ಧ ಕೇಂದ್ರದ ಮೇಲೆ ಒತ್ತಡ ಹೇರಲು ಇಂದು ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ

ಮೇಕೆದಾಟು ಯೋಜನೆ ವಿರುದ್ಧ ಕೇಂದ್ರದ ಮೇಲೆ ಒತ್ತಡ ಹೇರಲು ಇಂದು ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ

ಎಂಕೆ ಸ್ಟಾಲಿನ್

ಎಂಕೆ ಸ್ಟಾಲಿನ್

ಮೇಕೆದಾಟು ಯೋಜನೆ ಬಗ್ಗೆ ಕರ್ನಾಟಕ ಸಿಎಂ ಯಡಿಯೂರಪ್ಪ ಪತ್ರ ಬರೆದ ಬೆನ್ನಲ್ಲೇ ತಮಿಳುನಾಡು ಸರ್ವ ಪಕ್ಷ ಕರೆದಿದ್ದು, ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರದ ಒತ್ತಡ ಹೇರುವ ಸಾಧ್ಯತೆ ಇದೆ.

  • Share this:

ನವದೆಹಲಿ, ಜು. 12: ಬೆಂಗಳೂರಿನ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಆದರೆ, ಈ ಯೋಜನೆಯ ಮೂಲಕ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಇದೇ ಕಾರಣಕ್ಕೆ ತಮಿಳುನಾಡು ಸರ್ಕಾರ ಕಳೆದ ಒಂದು ದಶಕಗಳಿಂದ ಯೋಜನೆಯ ವಿರುದ್ಧ ದ್ವನಿ ಎತ್ತುತ್ತಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಇಂದು ತಮಿಳುನಾಡು ಸರ್ಕಾರ ಅಲ್ಲಿನ ಸರ್ವ ಪಕ್ಷಗಳ ಸಭೆ ಕರೆದಿದೆ.


ಇದೇ ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು. ಭೇಟಿ ವೇಳೆ "ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡುವರೆಗೆ ಯೋಜನೆಗೆ ಅನುಮತಿ ಕೊಡಬೇಡಿ. ಕರ್ನಾಟಕ ತರಾತುರಿಯಲ್ಲಿ ಯೋಜನೆ ಆರಂಭಿಸುತ್ತಿದೆ. ಈ ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ" ಎಂದು ದೂರು ನೀಡಿದ್ದರು ಎನ್ನಲಾಗಿದೆ.


ಅಸಲಿಗೆ ಅಂತರ ರಾಜ್ಯ ಜಲ ವಿವಾದಗಳು ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳು ಹೇಳಿದಾಗಲೂ ಮಾತುಕತೆ ಮೂಲಕ ಬಗೆಹರಿದ ಉದಾಹರಣೆಗಳಿಲ್ಲ. ಅದರಲ್ಲೂ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಶತಕಗಳಿಂದಲೂ ನಡೆದುಕೊಂಡು ಬರುತ್ತಿರುವ ಕಾವೇರಿ ಜಲ ವಿವಾದ ಅತ್ಯಂತ ಸೂಕ್ಷ್ಮವಾದುದಾಗಿದೆ. ರಾಜಕೀಯ ಕಾರಣಗಳಿಗೆ ಮಾತ್ರವಲ್ಲದೆ ಜನ ಸಮಾನ್ಯರು ಕೂಡ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಸಂಗತಿಯಾಗಿದೆ. ಆದರೆ, ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸದೆ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದು ಮೇಕೆದಾಟು ಯೋಜನೆಯನ್ನು ಉಲ್ಲೇಖಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಪರಿಣಾಮ ಮೇಕೆದಾಟು ಯೋಜನೆಯನ್ನು ಶತಾಯಗತಾಯ ತಡೆಯಬೇಕೆಂದು ತಮಿಳುನಾಡು ಯತ್ನಿಸುತ್ತಿದೆ. ಯಡಿಯೂರಪ್ಪ ಬರೆದ ಪತ್ರದಿಂದ ಕರ್ನಾಟಕ ರಾಜ್ಯಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳು ದಟ್ಟವಾಗುತ್ತಿದೆ.


ಇದನ್ನೂ ಓದಿ: Sirisha Bandla – ಬಾಹ್ಯಾಕಾಶಕ್ಕೆ ಹಾರಿ ಚರಿತ್ರೆ ಸೃಷ್ಟಿಸಿದ ಶಿರಿಷಾ ಬಂಡ್ಲ ದಕ್ಷಿಣ ಭಾರತದ ಹೆಮ್ಮೆ


ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಯೋಜನೆಗಾಗಿ ರೂಪಿಸಿದ್ದ ಮೇಕೆದಾಟು ಅಣೆಕಟ್ಟು ಯೋಜನೆ ವಿಷಯದಲ್ಲಿ ಕರ್ನಾಟಕ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರದ ಜಲಸಂಪನ್ಮೂಲ ಮತ್ತು ಪರಿಸರ ಇಲಾಖೆಗೆ ಪತ್ರ ಬರೆದು ತಾತ್ವಿಕ ಒಪ್ಪಿಗೆ ಪಡೆದಿದೆ. ರಾಷ್ಟ್ರೀಯ ಜಲ‌ ನೀತಿಯಲ್ಲೂ ಕುಡಿಯುವ ನೀರಿಗಾಗಿ ಯೋಜನೆ ರೂಪಿಸಲು ಕೆಲವು ರಿಯಾಯಿತಿಗಳಿವೆ. ಮೇಕೆದಾಟು ಅಣೆಕಟ್ಟು ಯೋಜನೆ ಮೂಲಕ ತಮಿಳುನಾಡಿಗೆ ಹೋಗುತ್ತಿದ್ದ ನೀರನ್ನು ಕರ್ನಾಟಕದಲ್ಲಿ ತಡೆಯುತ್ತಿರಲಿಲ್ಲ. ತಮಿಳುನಾಡು ಪಾಲಿನ ನೀರನ್ನು ಕೊಡುವುದಾಗಿ ಕರ್ನಾಟಕ ಹೇಳುತ್ತಾ ಬಂದಿತ್ತು. ಹೆಚ್ಚುವರಿ ನೀರನ್ನು ಮಾತ್ರ ಬಳಸಿಕೊಳ್ಳುವುದಾಗಿ ಹೇಳಿತ್ತು. ಈ ಎಲ್ಲಾ ಹಿನ್ನಲೆಯಲ್ಲೇ ಕರ್ನಾಟಕ ಯೋಜನೆಯ ಡಿಪಿಆರ್ ಅನ್ನು ರೂಪಿಸಿತ್ತು. ಮೊದಲಿನಿಂದಲೂ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡಿಗೆ ಯಡಿಯೂರಪ್ಪ ಪತ್ರ ಹೊಸ ಅಸ್ತ್ರ ಒದಗಿಸಿದೆ. ಇದೇ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಲಾಗುತ್ತಿದೆ.‌ ಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರದ ಒತ್ತಡ ಹೇರುವ ಸಾಧ್ಯತೆ ಇದೆ.


(ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)


ವರದಿ: ಧರಣೀಶ ಬೂಕನಕೆರೆ

Published by:Vijayasarthy SN
First published: