ಬೆಂಗಳೂರು: ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಜಾತಂತ್ರದ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಐದು ವರ್ಷದ ಬಳಿಕ ರಾಜ್ಯದಲ್ಲಿ ಮತ್ತೆ ವಿಧಾನಸಭಾ ಚುನಾವಣೆ ಬಂದಿದೆ. ಇಂದು ಒಂದೇ ಹಂತದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ಆದರೆ ಈ ಭಾರಿಯ ಚುನಾವಣೆಗೆ ಮಳೆಯ (Rain in Karnataka) ಕರಿಛಾಯೆಯೂ (Weather Report) ತಟ್ಟಿದೆ.
ಹೌದು. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಎರಡು ದಿನದ ಹಿಂದೆಯೇ ಹವಾಮಾನ ಇಲಾಖೆ ಸೂಚಿಸಿತ್ತು. ಇದು ಇಂದು ನಡೆಯಲಿರುವ ಮತದಾನ ಪ್ರಕ್ರಿಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವರ್ಷಧಾರೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಆದೇಶಿಸಿದೆ.
ಇದನ್ನೂ ಓದಿ: Karnataka Election 2023 Live Updates: ರಂಗೇರಿದ ಚುನಾವಣಾ ರಣಕಣ, ಮತದಾನಕ್ಕೆ ಕ್ಷಣಗಣನೆ
ಹೇಗಿದೆ ತಾಪಮಾನ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇತ್ತ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮಾತ್ರವಲ್ಲದೇ ಮಲೆನಾಡು, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ಬೀದರ್ ಸೇರಿದಂತೆ ಹಲವು ಭಾಗಗಳಲ್ಲಿ ನಿನ್ನೆ ಮಳೆ ಸುರಿದಿದ್ದು, ಹವಾಮಾನ ಇಲಾಖೆಯೂ ಮುಂದಿನ ನಾಲ್ಕೈದು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿರುವುದರಿಂದ ಮತದಾನದ ಮೇಲೆ ಎಫೆಕ್ಟ್ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ: Ramanagara Elections: ಹಕ್ಕು ಚಲಾಯಿಸಲು ಸಜ್ಜಾದ ರಾಮನಗರ ಜಿಲ್ಲೆಯ ಘಟಾನುಘಟಿ ನಾಯಕರು!
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೋಖಾ ಚಂಡಮಾರುತ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ಇದರಿಂದ ಇಂದು ಮತ್ತು ನಾಳೆ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಇನ್ನು ಬೆಂಗಳೂರು, ಮಲೆನಾಡು, ರಾಮನಗರ, ಮೈಸೂರು ಸೇರಿದಂತೆ ಹಲವು ಭಾಗದಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವರಣ ಇದ್ದು, ಯಾವ ಸಂದರ್ಭದಲ್ಲೂ ಮಳೆ ಬಂದರೂ ಬರಬಹುದು. ಹೀಗಾಗಿ ಮಳೆ ಬಂದರೂ ಕೂಡ ಮತದಾನದಿಂದ ತಪ್ಪಿಸದೆ ಎಚ್ಚರಿಕೆಯಿಂದ ತಮ್ಮ ಹಕ್ಕು ಚಲಾಯಿಸಲು ಜನರು ಮುಂದಾಗಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ