ನವದೆಹಲಿ (ಮಾ. 16): ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ ಎಂದು ಮಂಗಳವಾರ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಇರುವ ಗಡಿ ವಿಷಯದಲ್ಲಿ, ಬೆಳಗಾವಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಶಿವಸೇನೆ ಪಕ್ಷ ಪದೇ ಪದೇ ವಿವಾದ ಸೃಷ್ಟಿಸಿತ್ತು. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ 'ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು. ಇದಕ್ಕಾಗಿ ಹೋರಾಟ ಮಾಡಬೇಕಾಗಿದೆ' ಎಂದಿದ್ದರು. ಮಂಗಳವಾರ ಲೋಕಸಭೆಯ ಕಲಾಪದ ವೇಳೆ ಇಂಥದೊಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು "ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.
ಗಡಿ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಹಲವಾರು ವ್ಯಕ್ತಿಗಳು ಮನವಿ ಮಾಡಿದ್ದಾರೆ. ವಿವಿಧ ಸಂಸ್ಥೆಗಳು ಬೇಡಿಕೆ ಇಟ್ಟಿವೆ. ಆದರೆ ಅಂತಹ ಯಾವುದೇ ಪ್ರಸ್ತಾಪವು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಜೊತೆಗೆ 2011ರ ಜನಗಣತಿ ಪ್ರಕಾರ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮರಾಠಿ ಮಾತನಾಡುವ ಜನಸಂಖ್ಯೆ 55,98,325 ಎಂದು ತಿಳಿಸಿದ್ದಾರೆ. ಆ ಜನ ದುಧಾನಿ, ಇಚಲಕರಂಜಿ, ಕಗಲ್, ಕಮಲ್ನಗರ, ಮೈನ್ದಾರ್ಗಿ, ನಿಪಾನಿ, ಸದಲ್ಗಿ ಮತ್ತು ಸಂಕೇಶ್ವರದಲ್ಲಿ ಇರುವುದು 2011ರ ಜನಗಣತಿಯಲ್ಲಿ ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಬೆಳಗಾವಿ ಲೋಕಸಭಾ, ಎರಡು ವಿಧಾನಸಭೆ ಸೇರಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು, ಕರ್ನಾಟಕದ ಗಡಿ ಭಾಗದಲ್ಲಿ ಮರಾಠಿ ಭಾಷೆ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಪ್ರಸ್ತಾಪದ ಪರಿಗಣನೆ ಇಲ್ಲ' ಎಂದು ಹೇಳಿರುವುದರಿಂದ ಕರ್ನಾಟಕದ ಬಗ್ಗೆ ವಿವಾದ ಸೃಷ್ಟಿಸುತ್ತಿದ್ದ ಮಹಾರಾಷ್ಟ್ರದ ನಡೆಗೆ ತೀವ್ರ ಮುಖಭಂಗ ಆದಂತಾಗಿದೆ. ಮುಖ್ಯವಾಗಿ ಇತ್ತೀಚೆಗೆ ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಹೇಳಿದ್ದ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರಿಗೆ ತೀವ್ರ ಹಿನ್ನಡೆ ಆದಂತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ