ರಾಜ್ಯದಲ್ಲಿ ಈಗ ವೀರ ಸಾವರ್ಕರ್ (Veera Savarkar) ವಿವಾದ (Controversy) ಜೋರಾಗಿದೆ. ಕಾಂಗ್ರೆಸ್-ಬಿಜೆಪಿ (Congress BJP) ಮಧ್ಯೆ ಸಾವರ್ಕರ್ ಫೈಟ್ ಇರುವಾಗ ಈ ಬಾರಿ ಗಣೇಶೋತ್ಸವವನ್ನು (Ganesha Festival) ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಘೋಷಿಸಿದ್ದರು. ಇದರ ಬೆನ್ನಲ್ಲೇ ಕುಂದಾನಗರಿ ಬೆಳಗಾವಿಯಲ್ಲಿ (Belagavi) ಈ ಬಾರಿ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಹೇಳಿದ್ದಾರೆ.
ಬೆಳಗಾವಿಯ ಗಣೇಶೋತ್ಸವಕ್ಕೆ ತನ್ನದೇ ಆದ ಶತಮಾನದ ಇತಿಹಾಸವಿದೆ. ಲೋಕಮಾನ್ಯ ಬಾಲಗಂಗಾಧರ ತಿಲಕ್ ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ ನೀಡಿದ್ದರು. ಅಂದಿನಿಂದಲೂ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗುತ್ತದೆ. ಈ ಬಾರಿ ಸಾವರ್ಕರ್ ಗಣೇಶೋತ್ಸವ ನಡೀತಿದೆ.
ಗಣೇಶನ ಜೊತೆ ಮಂಟಪದಲ್ಲಿ ಸಾವರ್ಕರ್ ಫೋಟೋ
ಬೆಳಗಾವಿ ನಗರದಾದ್ಯಂತ ಸುಮಾರು 350ಕ್ಕೂ ಹೆಚ್ಚು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸುತ್ತವೆ. 11 ದಿನಗಳ ಕಾಲ ಪ್ರತಿಷ್ಠಾಪಿಸಿ ಕೊನೆಯ ಅದ್ದೂರಿಯಾಗಿ ಮೆರವಣಿಗೆ ಮಾಡಿ ವಿಸರ್ಜನೆ ಮಾಡಲಾಗುತ್ತೆ. ಈ ವರ್ಷ ಪ್ರತಿ ಗಣೇಶೋತ್ಸವ ಮಂಡಳಿಗಳು ಗಣೇಶನ ಜೊತೆ ಮಂಟಪದಲ್ಲಿ ಸಾವರ್ಕರ್ ಫೋಟೋ ಇರಿಸಲಿವೆ.
ಇದನ್ನೂ ಓದಿ: ಮುಸ್ಲಿಂ ದಂಪತಿಯಿಂದ ಹಿಂದೂ ಸ್ವಾಮೀಜಿ ಪಾದಪೂಜೆ! ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯ್ತು ಗದಗ
ಸಾವರ್ಕರ್ ಭಾವಚಿತ್ರ ಕೊಡುತ್ತೇವೆ
ಈ ಕುರಿತು ಮಾತನಾಡಿರುವ ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್, ಯಾವ ಯುವಕ ಮಂಡಳಿಯವರು ಸಾವರ್ಕರ್ ಭಾವಚಿತ್ರ ಹಾಕ್ತೀವಿ ಅಂತಾರೆ ಅವರಿಗೆ ನಿಶ್ಚಿತವಾಗಿ ಅವಕಾಶ ನೀಡುತ್ತೇವೆ ಎಂದಿದ್ದಾರೆ.
ಯಾರಾದರೂ ತಡೆದರೆ ಗಂಭೀರ ಪರಿಣಾಮ
ಪೊಲೀಸ್ ಇಲಾಖೆ ತಡೆಯಲು ಮುಂದಾದ್ರೆ ಏನ್ ಮಾಡ್ತೀರಾ ಅಂತಾ ಮಾಧ್ಯಮಗಳ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅಭಯ್ ಪಾಟೀಲ್, ಯಾರಾದರೂ ತಡೆಯಲು ಮುಂದಾದರೆ ಗಂಭೀರ ಪರಿಣಾಮ ಎದುರಿಸುತ್ತಾರೆ. ಯಾರದಾರೂ ಸಾವರ್ಕರ್ ಭಾವಚಿತ್ರ ಹರಿಯಲು ಮುಂದಾದ್ರೆ ಅವರಿಗೆ ಏನ್ ಮಾಡಬೇಕು ಆ ದಿವಸ ಮಾಡ್ತೀವಿ ಅಂತಾ ಎಚ್ಚರಿಸಿದ್ದಾರೆ.
ಬಹಳಷ್ಟು ಯುವಕ ಮಂಡಳಿಯವರು ಗಣೇಶೋತ್ಸವ ಮಂಟಪದಲ್ಲಿ ಸಾವರ್ಕರ್ ಭಾವಚಿತ್ರ ಹಾಕ್ತೀವಿ, ಯಾರು ಬಂದು ಹರಿದು ಹಾಕ್ತಾರೆ ನೋಡೋಣ ಎಂಬ ಭಾವನೆ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಇಡೀ ದೇಶದ ನಾಯಕರು ಜಗತ್ತಿಗೆ ಮಾರ್ಗದರ್ಶನ ನೀಡಿದಂತವರು. ಅವರ ಭಾವಚಿತ್ರ ಗಣೇಶೋತ್ಸವ ಮಂಡಳಿಯಲ್ಲಿ ಹಾಕಿ ಅಂತಾ ಹೇಳಿದ್ದೇವೆ ಎಂದಿದ್ದಾರೆ.
ಸಾವರ್ಕರ್ ಇತಿಹಾಸ ಹೇಳುತ್ತೇವೆ
ಈ ಬಗ್ಗೆ ಮಾತನಾಡಿದ ಶಾಸಕ ಅನಿಲ್ ಬೆನಕೆ, ಪ್ರತಿ ಗಣೇಶೋತ್ಸವ ಮಂಡಳಿಗಳಲ್ಲಿ ಖಂಡಿತ ಸಾವರ್ಕರ್ ಫೋಟೋ ಹಾಕ್ತೀವಿ. ಪ್ರತಿ ವಾರ್ಡ್, ಪ್ರತಿ ಗಲ್ಲಿಯ ಗಣೇಶ ಮಂಟಪಗಳಲ್ಲಿ ಸಾವರ್ಕರ್ ಫೋಟೋ ಹಾಕ್ತೀವಿ. ಸಾವರ್ಕರ್ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇದ್ದರು. 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಸಂದರ್ಭದಲ್ಲಿ ಅವರ ಇತಿಹಾಸ ತಿಳಿಸುವ ಪ್ರಯತ್ನ ಮಾಡ್ತೀವಿ ಅಂದರು.
ದೇಶಕ್ಕಾಗಿ ತಮ್ಮ ಜೀವನ ಅರ್ಪಿಸಿದವರು ಸಾವರ್ಕರ್. ಖಂಡಿತವಾಗಿ ಬರುವ ಕಾಲದಲ್ಲಿ ಅವರ ಫೋಟೋ ಹಾಕ್ತೀವಿ. ಸಾವರ್ಕರ್ ಫೋಟೋ ಹಾಕಿದ್ರೆ ಯಾರೂ ವಿರೋಧ ಮಾಡಬಾರದು. ನನ್ನ ಕ್ಷೇತ್ರದಲ್ಲಿ 252 ಗಣೇಶ ಮಂಟಪಗಳಿವೆ. ಎಲ್ಲರಿಗೂ ಸಾವರ್ಕರ್ ಫೋಟೋ ಕೊಡ್ತೇವೆ. ಅವರ ಫೋಟೋ ಜೊತೆ ಅವರ ಇತಿಹಾಸದ ಬಗ್ಗೆ ಬರಹವನ್ನು ಹಾಕುತ್ತೇವೆ. ಯಾರು ಹಾಕಲ್ಲ ಅಂತಾರೆ ಅವರ ಮನವೊಲಿಸಿ ಹಾಕಿಸುತ್ತೇವೆ ಅಂತಾ ಅನಿಲ್ ಬೆನಕೆ ಹೇಳಿದ್ದಾರೆ.
ಇದನ್ನೂ ಓದಿ: ನಾಟಿಕೋಳಿ ಸಾರು ತಿಂದು ದೇವಸ್ಥಾನಕ್ಕೆ ಹೋದ್ರಾ ಸಿದ್ದರಾಮಯ್ಯ? ಫೋಟೋ ವೈರಲ್
ಬೆಳಗಾವಿಗೂ ಸಾವರ್ಕರ್ಗೂ ವಿಶೇಷವಾದ ನಂಟು
ಬೆಳಗಾವಿಗೂ ಸಾವರ್ಕರ್ಗೂ ವಿಶೇಷವಾದ ನಂಟಿದೆ. 1950ರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ 100 ದಿನಗಳ ಕಾಲ ವಿಚಾರಣಾಧೀನ ಕೈದಿಯಾಗಿದ್ದರು. 1950ರಲ್ಲಿ ಪಾಕಿಸ್ತಾನ ಪ್ರಧಾನಿ ಲಿಯಾಕತ್ ಅಲಿ ಖಾನ್ ಭಾರತ ಭೇಟಿ ವಿರೋಧಿಸಿದ್ದ ವಿನಾಯಕ್ ದಾಮೋದರ್ ಸಾವರ್ಕರ್ರನ್ನು ಮುಂಜಾಗ್ರತಾ ಕ್ರಮವಾಗಿ ಅಂದಿನ ಸರ್ಕಾರ ಬಂಧಿಸಿತ್ತು.
ಬಳಿಕ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ 100 ದಿನಗಳ ಕಾಲ ಇರಿಸಲಾಗಿತ್ತು. ಈ ವೇಳೆ ಬಾಂಬೆ ಹೈಕೋರ್ಟ್ಗೆ ಸಾವರ್ಕರ್ ಪುತ್ರ ಹೆಬೀಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಬಳಿಕ 1950ರ ಜುಲೈ 13ರಂದು ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ