ಬೆಂಗಳೂರು (ಜೂನ್ 16): ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್ ಮಂಡಳಿ ಮತ್ತು ಜವಳಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ವಕ್ಫ್ ಆಸ್ತಿಗಳ ದುರ್ಬಳಕೆ ಹಾಗೂ ಒತ್ತುವರಿ ಬಗ್ಗೆ ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಲೋಕಾಯುಕ್ತರು ಮಧ್ಯಂತರ ವರದಿ ಸಲ್ಲಿಸಿದ್ದು, ಈ ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ಬಾರಿ ಹಜ್ ಯಾತ್ರೆ ಇಲ್ಲ
ಕೋವಿಡ್ 19 ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಪವಿತ್ರ ಹಜ್ ಯಾತ್ರೆಯ ಕುರಿತು ಸೌದಿ ಅರೇಬಿಯಾದಿಂದ ಯಾವುದೇ ಮಾಹಿತಿ ಸ್ವೀಕೃತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ 2020ರ ಯಾತ್ರೆಗೆ ಆಯ್ಕೆಯಾದ ಯಾತ್ರಾರ್ಥಿಗಳು ತಮ್ಮ ಮುಂಗಡ ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕೈಮಗ್ಗ ಮತ್ತು ಜವಳಿ ಇಲಾಖೆ:
ನೇಕಾರ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 2000 ರೂ. ಆರ್ಥಿಕ ನೆರವು ನೀಡಲು ಆನ್ ಲೈನ್ ನಲ್ಲಿ 18991 ಅರ್ಜಿಗಳು ಸ್ವೀಕೃತವಾಗಿವೆ. ಶೀಘ್ರವೇ ನೇಕಾರರಿಗೆ ನೆರವು ತಲುಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
14.15 ಕೋಟಿ ರೂ. ಮೌಲ್ಯದ ಕೈಮಗ್ಗ ಉತ್ಪನ್ನ ದಾಸ್ತಾನು ಹಾಗೂ 942.66 ಕೋಟಿ ರೂ. ಮೌಲ್ಯದ ವಿದ್ಯುತ್ ಮಗ್ಗ ಉತ್ಪನ್ನಗಳ ದಾಸ್ತಾನು ಮಾರಾಟವಾಗದೆ ಉಳಿದಿದೆ. ಇದರಲ್ಲಿ ವಿದ್ಯುತ್ ಮಗ್ಗದ ಸೀರೆಗಳನ್ನು ಉಚಿತ ದರದಲ್ಲಿ ಖರೀದಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ವಿದ್ಯುತ್ ಮಗ್ಗ ಘಟಕಗಳ ಕೂಲಿ ಕಾರ್ಮಿಕರಿಗೆ ಒಂದು ಬಾರಿಗೆ ಆರ್ಥಿಕ ನೆರವು ನೀಡಲು ಆನ್ ಲೈನ್ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಮೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮೂವರು ನೇಕಾರರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ನೀಡಲು ಸೂಚಿಸಿದರು.
ಇದನ್ನು ಓದಿ: ಬೆಂಗಳೂರಿನಲ್ಲಿ ಮುಂದುವರಿದ ಮರಣ ಮೃದಂಗ; ರಾಜ್ಯದಲ್ಲಿ ಶತಕ ಸಮೀಪಿಸಿದ ಸಾವಿನ ಸಂಖ್ಯೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ