ಬೆಂಗಳೂರು; ಕೋವಿಡ್ ನಿಯಂತ್ರಿಸುವ ಬಗ್ಗೆ ತಜ್ಞರ ಜೊತೆಗೆ ಇಂದು ಸಭೆ ನಡೆಸಲಾಗಿದೆ. ಈ ತಿಂಗಳಲ್ಲಿ ದೀಪಾವಳಿ ಹಬ್ಬ ಇದೆ. ಮುಂದೆ ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಇದೆ. ಚಳಿಗಾಲ ಸಹ ಇದೆ. ರಾಜ್ಯದಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕರ್ನಾಟಕದಲ್ಲಿ ಗುಣಮುಖ ಆಗಿರುವವರ ಸಂಖ್ಯೆ ಹೆಚ್ಚಾಗಿದೆ. ಚಳಿಗಾಲ ಹಬ್ಬದ ಹಿನ್ನೆಲೆಯಲ್ಲಿ ಮುಂದೆ ಸ್ವಲ್ಪ ಆತಂಕ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಚಳಿಗಾಲ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಿಸುವ ಸಂಬಂಧ ತಾಂತ್ರಿಕ ಸಮಿತಿ ಹಾಗೂ ತಜ್ಞರ ಜೊತೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಉಪಚುನಾವಣೆ ನಡೆದ ಎರಡು ಕ್ಷೇತ್ರದಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಅಂತ ತಜ್ಞರ ಸಮಿತಿ ವರದಿ ನೀಡಿದೆ. ಅದೇ ರೀತಿ ಗ್ರಾಮ ಪಂಚಾಯತಿ ಚುನಾವಣೆ ಸಹ ಮುಂದೂಡಲು ವರದಿ ನೀಡಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿ: ಮಂತ್ರಾಲಯದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ತುಂಗಭದ್ರಾ ಪುಷ್ಕರ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ
ಈ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಲು ಚಿಂತನೆ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಸರ್ಕಾರದ ನಿರ್ಧಾರ ಘೋಷಣೆ ಮಾಡಲಾಗುವುದು. ಈ ಬಾರಿ ಸರಳ ದೀಪಾವಳಿ ಆಚರಿಸಬೇಕಿದೆ. ದೀಪ ಹಚ್ಚುವ ಮೂಲಕ ಹಬ್ಬ ಆಚರಣೆ ಮಾಡಬೇಕು. ಪಟಾಕಿಯಿಂದ ಶ್ವಾಸಕೋಶದ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಕಾರಣದಿಂದ ತಜ್ಞರು ಪಟಾಕಿ ಬೇಡ ಎಂದಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು.
ಗ್ರಾಮ ಪಂಚಾಯತಿ ಚುನಾವಣೆ ಸದ್ಯಕ್ಕೆ ಬೇಡ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಮನೆಮನೆಗೆ ಕೋವಿಡ್ ತಲುಪಿಸಿದಂತೆ ಆಗುತ್ತದೆ. ಫೆಬ್ರವರಿವರೆಗೆ ಚುನಾವಣೆ ಮುಂದೂಡುವುದು ಒಳಿತು ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ